
ಸಿದ್ದರಾಮಯ್ಯ, ಡಾ. ಯತೀಂದ್ರ ಸಿದ್ದರಾಮಯ್ಯ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯದ ಸಂಧ್ಯಾಕಾಲದಲ್ಲಿದ್ದಾರೆ ಎಂದು ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನವೆಂಬರ್ ನಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿರುವಾಗಲೇ ಅವರಿಂದ ಈ ರೀತಿಯ ಹೇಳಿಕೆ ಬಂದಿದೆ.
ಆದರೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಆ ಬಳಿಕ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು.
‘ಅವರು ರಾಜಕೀಯದ ಸಂಧ್ಯಾಕಾಲಯದಲ್ಲಿದ್ದಾರೆ. ಇಂತಹ ಸಮಯದಲ್ಲಿ ಪ್ರಗತಿಪರ ಚಿಂತನೆ ಹೊಂದಿರುವವರಿಗೆ, ಸೈದ್ಧಾಂತಿಕವಾಗಿ ಮಾರ್ಗದರ್ಶನ ನೀಡಲು ಮತ್ತು ಮುನ್ನಡೆಸಲು ಒಬ್ಬ ನಾಯಕನ ಅಗತ್ಯವಿದೆ’ ಎಂದು ಅವರು ಹೇಳಿದ್ದಾರೆ.
ಚಿಕ್ಕೋಡಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ‘ಜಾರಕಿಹೊಳಿ ಈ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಮರ್ಥರು. ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿ ನಂಬಿಕೆ ಇರುವ ನಾಯಕರಿಗೆ ಹಾಗೂ ಯುವಕರಿಗೆ ಅವರು ಮಾದರಿ’ ಎಂದು ಹೇಳಿದ್ದಾರೆ.
‘ಸಿದ್ಧಾಂತಬದ್ಧವಾದ ರಾಜಕಾರಣಿಗಳು ಇರುವುದು ವಿರಳ. ಆದರೆ ಜಾರಕಿಹೊಳಿಯವರು ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರು ಆ ಕೆಲಸವನ್ನು ಮುಂದುವರಿಸಬೇಕು’ ಎಂದು ಹೇಳಿದ್ದಾರೆ.
ಅವರ ಈ ಹೇಳಿಕೆ ಒಂದು ವೇಳೆ ನಾಯಕತ್ವ ಬದಲಾಗುವ ಸನ್ನಿವೇಶ ಬಂದರೆ ಸಿದ್ದರಾಮಯ್ಯ ಬಣ ಸತೀಶ್ ಜಾರಕಿಹೊಳಿಯವರ ಹೆಸರನ್ನು ಮುನ್ನಲೆಗೆ ತರಬಹುದು ಎನ್ನುವ ಚರ್ಚೆ ಹುಟ್ಟು ಹಾಕಿದೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.