ADVERTISEMENT

ಕುರುಬ ಸಮಾಜದ ಅಭಿವೃದ್ಧಿಗೆ ಸಹಕಾರ

ಸತೀಶ ಜಾರಕಿಹೊಳಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2021, 12:31 IST
Last Updated 6 ಆಗಸ್ಟ್ 2021, 12:31 IST
ಬೆಳಗಾವಿ ತಾಲ್ಲೂಕಿನ ಶಿಂದೊಳ್ಳಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕುರಿ ಸಂಗೋಪನ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸತ್ಕರಿಸಿದರು
ಬೆಳಗಾವಿ ತಾಲ್ಲೂಕಿನ ಶಿಂದೊಳ್ಳಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕುರಿ ಸಂಗೋಪನ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸತ್ಕರಿಸಿದರು   

ಬೆಳಗಾವಿ: ‘ಕುರಿ ಸಾಕಾಣಿಕೆ, ಉಣ್ಣೆ ಉತ್ಪಾದಕ ಕೂಲಿ ಕಾರ್ಮಿಕರ ಏಳಿಗೆಗಾಗಿ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಲು ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಕುರುಬ ಸಮಾಜದ ಸಂಘಗಳ ಅಭಿವೃದ್ಧಿಗಾಗಿ ಸರ್ಕಾರದ ಯೋಜನೆಗಳನ್ನು ತಲುಪಿಸಲು ಪ್ರಯತ್ನ ಮಾಡಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭರವಸೆ ನೀಡಿದರು.

ತಾಲ್ಲೂಕಿನ ಶಿಂದೊಳ್ಳಿ ಗ್ರಾಮದ ಕನಕದಾಸ ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಆವರಣದಲ್ಲಿ ಜಿಲ್ಲೆಯ ಕುರಿ ಸಂಗೋಪನ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘಗಳ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಸದಸ್ಯರ ಮಿಲನ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಇದ್ದಾಗ ಕುರುಬ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಸರ್ಕಾರ ಬದಲಾದ ಬಳಿಕ ಆ ಯೋಜನೆಗಳು ನನೆಗುದಿಗೆ ಬಿದ್ದಿವೆ. ಅವುಗಳ ಅನುಷ್ಠಾನಕ್ಕೆ ಪ್ರಯತ್ನ ಮಾಡುತ್ತೇವೆ. ಶಿಂದೋಳಿ ಕೂಲಿ ಕಾರ್ಮಿಕರಿಗೆ ಬೇಕಾದ ಸೌಲಭ್ಯ ಕಲ್ಪಿಸಲು ಶ್ರಮಿಸುತ್ತೇವೆ. ಸಮಾಜದ ಸಮಗ್ರ ಅಭಿವೃದ್ಧಿಗೆ ನಮ್ಮ ಮಟ್ಟದಲ್ಲಿ ಪ್ರಯತ್ನಿಸಲಾಗುವುದು’ ಎಂದರು.

ADVERTISEMENT

‘ರಾಜ್ಯದಲ್ಲಿ ಕುರಿ ಸಾಕಾಣಿಕೆಯಲ್ಲಿ ಬೆಳಗಾವಿ ಜಿಲ್ಲೆ ಮುಂದಿದೆ. ಇಲ್ಲಿನ ಉತ್ಪನ್ನಗಳು ವಿಧ ಜಿಲ್ಲೆ ಹಾಗೂ ರಾಜ್ಯಗಳಿಗೆ ರಪ್ತಾಗುತ್ತಿವೆ. ಕೂಲಿ ಕಾರ್ಮಿಕರು ಬಿಡಿಸಿಸಿ ಬ್ಯಾಂಕ್‌ ಮೂಲಕ ಸಾಲ ಪಡೆದುಕೊಳ್ಳಬಹುದು. ಸಂಘಟನೆಗಳಲ್ಲಿ ಸಮಸ್ಯೆ ಇದ್ದರೆ ಜಿಲ್ಲಾಡಳಿತದ ಗಮನಕ್ಕೆ ತಂದು ಪರಿಹರಿಸಲಾಗುವುದು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಹೆಚ್ಚಿನ ಉಣ್ಣೆ ಉತ್ಪಾದಕ ಘಟಕಗಳ ಪ್ರಾರಂಭಿಸಲು ಸರ್ಕಾರ ಮಟ್ಟದಲ್ಲಿ ಕೆಲಸಗಳನ್ನು ಮಾಡಲಾಗುತ್ತಿದೆ. ಇದರಿಂದ, ಸ್ಥಳೀಯ ಮಹಿಳೆಯರು ಬದುಕು ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ’ ಎಂದರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೃಷ್ಣ ಅನಗೋಳಕರ, ಮುಖಂಡರಾದ ಲಕ್ಷ್ಮಣರಾವ ಚಿಂಗಳೆ, ಸುಭಾಷ ಡವಳೇಶ್ವರ, ಗಜಾನನ ಕೊಳ್ಳಿ, ಆರ್.ಬಿ. ರೆಬ್ಬನ್ನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.