ADVERTISEMENT

ಬೆಳಗಾವಿ: ಸುಳ್ಳು ಭರವಸೆ ವಿರುದ್ಧದ ಹೋರಾಟ-ಸತೀಶ ಜಾರಕಿಹೊಳಿ

ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2021, 14:27 IST
Last Updated 4 ಏಪ್ರಿಲ್ 2021, 14:27 IST
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿ ತಾಲ್ಲೂಕಿನ ಯಳ್ಳೂರ ಗ್ರಾಮದಲ್ಲಿ ಭಾನುವಾರ ಪ್ರಚಾರ ನಡೆಸಿದರು
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿ ತಾಲ್ಲೂಕಿನ ಯಳ್ಳೂರ ಗ್ರಾಮದಲ್ಲಿ ಭಾನುವಾರ ಪ್ರಚಾರ ನಡೆಸಿದರು   

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯು ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ 7 ವರ್ಷಗಳ ಸುಳ್ಳು ಭರವಸೆಗಳ ವಿರುದ್ಧದ ಹೋರಾಟವಾಗಿದೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು.

ಉಪ ಚುನಾವಣೆ ಹಿನ್ನೆಲೆಯಲ್ಲಿ, ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಯಳ್ಳೂರ ಹಾಗೂ ಧಾಮನೆ ಗ್ರಾಮಗಳಲ್ಲಿ ಭಾನುವಾರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ದುರಾಡಳಿತನ್ನು ಜನರಿಗೆ ತಿಳಿಸಲಾಗುವುದು. ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಕೈಗೊಂಡಿದ್ದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುತ್ತಿದ್ದೇವೆ’ ಎಂದರು.

ADVERTISEMENT

‘ಕೇವಲ ಮಾತನಾಡುವುದರಿಂದ ರಾಮರಾಜ್ಯ ನಿರ್ಮಾಣ ಆಗುವುದಿಲ್ಲ. ಚಿತ್ರ ನಟರ ಹುಟ್ಟಿದ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸುತ್ತಾರೆ. ಆದರೆ, ನಾಲ್ಕು ತಿಂಗಳಿಂದ ದೆಹಲಿಯ ಗಡಿಭಾಗದಲ್ಲಿ ಚಳವಳಿ ನಡೆಸುತ್ತಿರುವ ರೈತರನ್ನು ಪ್ರಧಾನಿ, ಗೃಹ ಸಚಿವರು ಸೇರಿ ಸರ್ಕಾರದ ಯಾರೊಬ್ಬರೂ ಭೇಟಿಯಾಗಿಲ್ಲ. ಅವರ ಸಮಸ್ಯೆಗಳನ್ನೂ ಆಲಿಸಿಲ್ಲ’ ಎಂದು ಆರೋಪಿಸಿದರು.

ಖಾನಾಪುರ ಶಾಸಕಿ ಡಾ.ಅಂಜಲಿ ನಿಂಬಾಳ್ಕರ ಅವರು ಯಳ್ಳೂರ ಹಾಗೂ ಧಾಮಣೆ ಗ್ರಾಮಗಳಲ್ಲಿ ಕಾಂಗ್ರೆಸ್‌ ಪರ ಪ್ರಚಾರ ನಡೆಸಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ಮುಖಂಡರಾದ ವೀರಕುಮಾರ ಪಾಟೀಲ, ರಮೇಶ ಗೋರಲ, ಕಿರಣ ಪಾಟೀಲ, ಜಯರಾಜ ಹಲಗೇಕರ, ರಾಜು ಎಚ್, ಜ್ಯೋತಿ ಗವಿ, ಪರಶುರಾಮ ಕೋಲಕಾರ, ಕಾಕಾಸಾಬ ಪಾಟೀಲ, ಲಕ್ಷ್ಮಣರಾವ ಚಿಂಗಳೆ ಪಾಲ್ಗೊಂಡಿದ್ದರು.

ಸಾಂಬ್ರಾದಲ್ಲಿ:

‘ಬಿಜೆಪಿಯು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ. ನೀಡಿದ್ದ ಯಾವ ಭರವಸೆಯನ್ನೂ ಈಡೇರಿಸಿಲ್ಲ’ ಎಂದು ಶಾಸಕ ಎಂ.ಬಿ. ಪಾಟೀಲ ದೂರಿದರು.

ಕಾಂಗ್ರೆಸ್‌ ಪರವಾಗಿ ಸಾಂಬ್ರಾ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, ‘ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್‌ನ ಒಮ್ಮತದ ಅಭ್ಯರ್ಥಿ. ಅವರನ್ನು ಕಣಕ್ಕಿಳಿಸುವುದಕ್ಕೆ ಯಾರೊಬ್ಬರೂ ಆಕ್ಷೇಪ ವ್ಯಕ್ತಪಡಿಸಲಿಲ್ಲ. ಅವರ ನಾಯಕತ್ವ ಎಂಥದ್ದು ಎನ್ನುವುದು ಹಳ್ಳಿಯಿಂದ ದಿಲ್ಲಿಯವರೆಗೆ ಎಲ್ಲರಿಗೂ ಗೊತ್ತಿದೆ’ ಎಂದರು.

ಶಾಸಕಕ ಗಣೇಶ ಹುಕ್ಕೇರಿ, ‘ಬಿಜೆಪಿಗೆ ಜನರ ನೋವು ಅರ್ಥವಾಗುವುದಿಲ್ಲ. ಹೀಗಾಗಿ, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಿಲ್ಲ’ ಎಂದು ಟೀಕಿಸಿದರು.

ಮುಖಂಡರಾದ ರಾಜು ಸೇಠ್, ಸಿ.ಸಿ. ಪಾಟೀಲ, ನಾಗರಾಜ ಯಾದವ, ಚನ್ನರಾಜ ಹಟ್ಟಿಹೊಳಿ, ಶಂಕರಗೌಡ ಪಾಟೀಲ, ನಾಗೇಶ ದೇಸಾಯಿ, ಬಸವರಾಜ‌ ಮ್ಯಾಗೋಟಿ, ನಿಲೇಶ ಚಂದಗಡ್ಕರ, ಮೃಣಾಲ ಹೆಬ್ಬಾಳಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.