ಬೆಳಗಾವಿ: ‘ಕೋವಿಡ್-19 ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾದ ಮುಸುಕಿನಜೋಳ ಬೆಳೆಗಾರರಿಗೆ ಎಕರೆಗೆ ₹ 5ಸಾವಿರ ಆರ್ಥಿಕ ನೆರವನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಸಂದಾಯ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.
‘ಈ ನಿಟ್ಟಿನಲ್ಲಿ ತಕ್ಷಣ ಕಾರ್ಯಪ್ರವರ್ತರಾಗಲು ಸಹಾಯಕ ಕೃಷಿ ನಿರ್ದೇಶಕರು ಹಾಗೂ ತಹಶೀಲ್ದಾರರಿಗೆ ಸೂಚಿಸಲಾಗಿದೆ. 2019–20ನೇ ಸಾಲಿನಲ್ಲಿ ಮುಸುಕಿನಜೋಳ ಬೆಳೆದ ರೈತರ ವಿವರವನ್ನು ಬೆಳೆ ಸಮೀಕ್ಷೆ ಯೋಜನೆಯಲ್ಲಿ ಸಂಗ್ರಹಿಸಲಾಗಿದೆ. ಈ ದತ್ತಾಂಶದ ಆಧಾರದ ಮೇರೆಗೆ ಪ್ರತಿ ರೈತರು ಒಂದು ಹಂಗಾಮಿಗೆ ಅನ್ವಯ ಆಗುವಂತೆ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ’ ಎಂದು ಮಾಹಿತಿ ನೀಡಿದ್ದಾರೆ.
‘ಸಮೀಕ್ಷೆಯಲ್ಲಿರುವಂತೆ ಬೆಳೆಗಾರರ ಪಟ್ಟಿಯನ್ನು ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಕಚೇರಿಯಲ್ಲಿ ಪ್ರದರ್ಶಿಸಲಾಗಿದೆ. ಆ ರೈತರು ಎಫ್ಆರ್ಯುಐಟಿಎಸ್–ಐಡಿ ಹೊಂದಿರದಿದ್ದಲ್ಲಿ ತಕ್ಷಣ ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಪಾಸ್ಪೋರ್ಟ್ ಅಳತೆಯ ಫೋಟೊ, ಪರಿಶಿಷ್ಟ ಜಾತಿ, ಪಂಗಡದ ರೈತರಾಗಿದಲ್ಲಿ ಆರ್ಡಿ ಸಂಖ್ಯೆಯುಳ್ಳ ಜಾತಿ ಪ್ರಮಾಣಪತ್ರವನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿಎಫ್ಆರ್ಯುಐಟಿಎಸ್–ಐಡಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಬಳಿಕ ಸಹಾಯಧನ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಜಂಟಿ ಖಾತೆಯಾಗಿದ್ದಲ್ಲಿ ಇತರ ಖಾತೆದಾರರಿಂದ ₹ 20 ಛಾಪಾ ಕಾಗದ ಮೇಲೆ ನೋಟರಿಯಿಂದ ದೃಢೀಕೃತ ಪ್ರಮಾಣಪತ್ರ ಸಲ್ಲಿಸಬೇಕು. ಪೌತಿ ಖಾತೆದಾರರಾಗಿದ್ದಲ್ಲಿ ಗ್ರಾಮಲೆಕ್ಕಿಗರಿಂದ ಧೃಢೀಕರಿಸಿದ ಹಾಗೂ ಕುಟುಂಬದ ಇತರ ಸದಸ್ಯರಿಂದ ಒಪ್ಪಿಗೆ ಪಡೆದ ಅರ್ಜಿ ಸಲ್ಲಿಸಬಹುದು’ ಎಂದು ವಿವರಿಸಿದ್ದಾರೆ.
ಆಸಕ್ತರು ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.