ಬೆಳಗಾವಿ: ‘ಜಿಲ್ಲೆಯಲ್ಲಿ ಜುಲೈ 15ರವರೆಗೆ ಪ್ರವಾಹ, ಪ್ರಕೃತಿ ವಿಕೋಪದ ಘಟನೆಗಳು ಉಂಟಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
‘ಜುಲೈ 15ರವರೆಗೆ ಗುಡುಗು ಸಹಿತ ಭಾರಿ ಮಳೆ ಹಾಗೂ ಬಿರುಗಾಳಿಯ ಮುನ್ಸೂಚನೆಯನ್ನುಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರವಾಹದ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಎಲ್ಲ ರೀತಿಯ ಕ್ರಮ ವಹಿಸಬೇಕು’ ಎಂದು ತಿಳಿಸಿದ್ದಾರೆ.
‘ಮಳೆ ಕುರಿತಂತೆ ಜನರಿಗೆ ಮಾಹಿತಿ ನೀಡಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ತಗ್ಗು ಪ್ರದೇಶ, ನದಿ ತೀರದಲ್ಲಿ ಹಾಗೂ ಕಾಲುವೆಗಳ ಸಮೀಪ ವಾಸಿಸುವ ಹಳ್ಳಿಯ ಜನರಿಗೆ ಪ್ರವಾಹದ ಕುರಿತು ಎಚ್ಚರಿಕೆ ನೀಡಬೇಕು. ಇಂತಹ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಸ್ಥಳಾಂತರಿಸಬೇಕು. ಮೀನುಗಾರಿಕೆಗೆ ನದಿಗಳಿಗೆ ತೆರಳದಂತೆ ಮೀನುಗಾರರಿಗೆ ಸೂಚನೆ ನೀಡಬೇಕು’ ಎಂದು ನಿರ್ದೇಶನ ನೀಡಿದ್ದಾರೆ.
ನಿಯಂತ್ರಣ ಕೊಠಡಿಗಳ ಸ್ಥಾಪನೆ: ‘ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ಸ್ಥಾಪಿಸಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ತುರ್ತು ಪರಿಸ್ಥಿತಿ ನಿಯಂತ್ರಣ ಕೊಠಡಿ ಹಾಗೂ ತಾಲೂಕು ಮಟ್ಟದಲ್ಲಿ ತಾಲೂಕು ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿಗಳನ್ನು ಸಕ್ರಿಯಗೊಳಿಸಬೇಕು. ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು ಈಗಾಗಲೇ ತಾಲ್ಲೂಕುವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅವರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ತಿಳಿಸಿದ್ದಾರೆ.
ರಕ್ಷಣಾ ತಂಡಗಳ ನಿಯೋಜನೆ: ‘ಪ್ರವಾಹದ ಸಮಯದಲ್ಲಿ ಜೀವ ಹಾನಿ ಉಂಟಾಗುವುದನ್ನು ತಡೆಯಲು ಚಿಕ್ಕೋಡಿ ತಾಲ್ಲೂಕಿನ ಯಡೂರದಲ್ಲಿ ಎನ್.ಡಿ.ಆರ್.ಎಫ್. ಮತ್ತು ಎಸ್.ಡಿ.ಆರ್.ಎಫ್. ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಬೋಟ್ ಹಾಗೂ ಲೈಫ್ಜಾಕೆಟ್ಗಳು ಸೇರಿದಂತೆ ಇತರ ರಕ್ಷಣಾ ಉಪಕರಣಗಳನ್ನು ಈಗಾಗಲೇ ಒದಗಿಸಲಾಗಿದೆ. ಪ್ರವಾಹಕ್ಕೆ ತುತ್ತಾಗಿ ನಿರಾಶ್ರಿತರಾದವರಿಗೆ ತಕ್ಷಣವೇ ನೆರವು ನೀಡಲು ತಾತ್ಕಾಲಿಕವಾಗಿ ಗಂಜಿ ಕೇಂದ್ರಗಳನ್ನು ತೆರೆಯಬೇಕು. ಅಲ್ಲದೇ, ತುರ್ತು ಪರಿಸ್ಥಿತಿಯಲ್ಲಿ ಆಹಾರ ಮತ್ತು ಔಷಧಿಗಳ ಕೊರತೆ ಉಂಟಾಗದಂತೆ ದಾಸ್ತಾನು ಮಾಡಿಕೊಳ್ಳಬೇಕು’ ಎಂದೂ ಸೂಚಿಸಿದ್ದಾರೆ.
ಜಿಲ್ಲೆಯಲ್ಲಿ ಮಾರ್ಕಂಡೇಯ, ಘಟಪ್ರಭಾ ಮತ್ತು ಮಲಪ್ರಭಾ ಜಲಾಶಯಗಳಿವೆ. ಇವುಗಳಲ್ಲಿ ಮಾರ್ಕಂಡೇಯ ಜಲಾಶಯ ಈಗಾಗಲೇ ಭರ್ತಿಯಾಗಿದ್ದು, ಗುರುವಾರ 300 ಕ್ಯುಸೆಕ್ ನೀರು ಹೊರಬಿಡಲಾಗಿತ್ತು. ಮುನ್ಸೂಚನೆಯ ಪ್ರಕಾರ ಜೋರು ಮಳೆಯಾದರೆ ಮಲಪ್ರಭಾ ಮತ್ತು ಘಟಪ್ರಭಾ ಜಲಾಶಯಗಳು ಕೆಲವೇ ದಿನಗಳಲ್ಲಿ ಭರ್ತಿಯಾಗಲಿವೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾದರೆ ಕೃಷ್ಣಾ ನದಿಗೆ ಹೆಚ್ಚಿನ ನೀರು ಬಂದು ಸೇರಲಿದೆ. ಇದರಿಂದ ಪ್ರವಾಹ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ವ್ಯವಸ್ಥೆ ಮಾಡಿಕೊಳ್ಳಿ
ಕೋವಿಡ್–19 ವಾರ್ಡ್ಗಳುಳ್ಳ ಹಾಗೂ ಇತರ ಎಲ್ಲ ಆಸ್ಪತ್ರೆಗಳು ವಿದ್ಯುತ್ಗಾಗಿ ಪರ್ಯಾಯ ಮೂಲದ ವ್ಯವಸ್ಥೆ ಮಾಡಿಕೊಳ್ಳಬೇಕು.
– ಎಂ.ಜಿ. ಹಿರೆಮಠ, ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.