ಬೆಳಗಾವಿ: ವ್ಯಕ್ತಿಯೊಬ್ಬರಿಗೆ ಆಸ್ತಿಯ ಮೇಲಿನ ಭೋಜಾ ಹಾಕಿಸಿಕೊಡಲು ಲಂಚ ಪಡೆದಿದ್ದ ಪ್ರಭಾರ ಪಿಡಿಒಗೆ 4ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ವಿಶೇಷ ನ್ಯಾಯಾಲಯ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹ 15 ಸಾವಿರ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.
ಖಾನಾಪುರ ತಾಲ್ಲೂಕು ಕೊಡಚವಾಡ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಾಬಳೇಶ್ವರ ಯಲ್ಲಪ್ಪ ಇಟಗೇಕರ ಶಿಕ್ಷೆಗೆ ಒಳಗಾದವರು.
ಅದೇ ತಾಲ್ಲೂಕಿನ ಅವರೊಳ್ಳಿಯ ವೀರಭದ್ರಪ್ಪ ಯಲ್ಲಪ್ಪ ಕೋಲಕರ ಅವರಿಂದ ₹ 1,400 ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಲಂಚದ ಹಣ ವಶಕ್ಕೆ ಪಡೆದಿದ್ದ ಪೊಲೀಸರು, 2015ರ ಜುಲೈ 1ರಂದು ಪ್ರಕರಣ ದಾಖಲಿಸಿದ್ದರು.
ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಗೋಪಾಲ ಡಿ. ಜೋಗಿನ ಪ್ರಕರಣ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ವಿಜಯ ವಿ. ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರವೀಣ ಅಗಸಗಿ ವಾದ ಮಂಡಿಸಿದ್ದರು ಎಂದು ಲೋಕಾಯುಕ್ತ ಎಸ್ಪಿ ಶಿವಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.