ಬೆಳಗಾವಿ: ‘ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರು ಮನೆ ಮನೆಗಳಿಗೆ ಭೇಟಿ ನೀಡಿ ಕುಷ್ಠ ಹಾಗೂ ಕ್ಷಯ ರೋಗದ ಲಕ್ಷಣಗಳು ಕಂಡು ಬಂದ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಿದ್ದಾರೆ. ಸಾರ್ವಜನಿಕರು ಸಮೀಕ್ಷಾ ತಂಡದವರು ಬಂದಾಗ ಅವರಿಗೆ ಸಹಕಾರ ನೀಡಬೇಕು’ ಎಂದು ಡಿಎಚ್ಒ ಡಾ.ಶಶಿಕಾಂತ ಮುನ್ಯಾಳ ತಿಳಿಸಿದರು.
ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣ ಘಟಕದ ಸಹಯೋಗದಲ್ಲಿ ಇಲ್ಲಿನ ವಡಗಾವಿಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ನಡೆದ ಕುಷ್ಠ ಹಾಗೂ ಕ್ಷಯ ರೋಗ ಪತ್ತೆ ಹಚ್ಚುವ ಆಂದೋಲನ ಉದ್ಘಾಟಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಸಮಾಜ ಕ್ಷೇಮಾಭಿವೃದ್ಧಿ ಮಂಡಳಿ ಸದಸ್ಯೆ ಮೀನಾಕ್ಷಿ ನೇಗಳ್ಳಿ, ‘ರೋಗ ಪತ್ತೆ ಆಂದೋಲನ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ. ಸಾರ್ವಜನಿಕರು ಸಹಕಾರ ನೀಡಬೇಕು. ದೊರೆಯುವ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.
ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಅನಿಲ ಕೋರಬು ಮಾತನಾಡಿ, ‘ಜಿಲ್ಲೆಯ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಂಶಯಾಸ್ಪದ ರೋಗಿಗಳ ಕ್ಷ-ಕಿರಣ ತಪಾಸಣೆ ಮಾಡಲಾಗುವುದು. ಕ್ಷ-ಕಿರಣ ಪರೀಕ್ಷೆಯಲ್ಲಿ ವಿಪರೀತ ಫಲಿತಾಂಶ ಬಂದ ಸಂಶಯಾಸ್ಪದ ಕ್ಷಯ ರೋಗಿಗಳಿಗೆ ಸಿಬಿನ್ಯಾಟ್ (ತ್ವರಿತ ಕ್ಷಯರೋಗ ತಪಾಸಣಾ ಯಂತ್ರ) ಸೌಲಭ್ಯವನ್ನು ಜಿಲ್ಲೆಯ ಅಥಣಿ, ಗೋಕಾಕ, ಚಿಕ್ಕೋಡಿ, ಸವದತ್ತಿ ಹಾಗೂ ಬೆಳಗಾವಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಲ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್. ತುಕ್ಕಾರ, ತಾಲ್ಲೂಕು ಆರೊಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ, ವಡಗಾವಿ ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಪ್ರಕಾಶ ವಾಲಿ, ಭರತ, ಸಿದ್ದರಾಮಪ್ಪ ಕರಬಸ್ತಿ ಇದ್ದರು.
ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಪಿ. ಯಲಿಗಾರ ಸ್ವಾಗತಿಸಿದರು. ಸಿ.ಜಿ. ಅಗ್ನಿಹೋತ್ರಿ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.