ADVERTISEMENT

ಬೆಳಗಾವಿ: ಗಣೇಶೋತ್ಸವಕ್ಕೆ 5 ದಿನಗಳ ಮಿತಿಗೆ ವಿರೋಧ

ಸರ್ಕಾರಕ್ಕೆ ತಕ್ಷಣವೇ ವರದಿ ಸಲ್ಲಿಸುವೆ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 12:14 IST
Last Updated 7 ಸೆಪ್ಟೆಂಬರ್ 2021, 12:14 IST
ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ನಡೆದ ಮಹಾಮಂಡಳಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿದರು
ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ನಡೆದ ಮಹಾಮಂಡಳಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿದರು   

ಬೆಳಗಾವಿ: ‘ಇಲ್ಲಿನ ಗಣೇಶೋತ್ಸವ ಮಹಾಮಂಡಳಗಳ ಒಕ್ಕೊರಲಿನ ಕೋರಿಕೆಯಂತೆ, ಗಣೇಶೋತ್ಸವವನ್ನು 5 ದಿನಗಳ ಬದಲಿಗೆ 10 ದಿನಗಳವರೆಗೆ ಅವಕಾಶ ಕಲ್ಪಿಸುವ ಬೇಡಿಕೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ತಕ್ಷಣವೇ ವರದಿ ಸಲ್ಲಿಸಲಾಗುವುದು. ಅಂತಿಮವಾಗಿ ಸರ್ಕಾರ ನೀಡುವ ನಿರ್ದೇಶನವನ್ನು ಎಲ್ಲರೂ ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಗಣೇಶೋತ್ಸವ ಮಹಾಮಂಡಳಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಉತ್ಸವಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವುದರಿಂದ ಏಕಗವಾಕ್ಷಿ ವ್ಯವಸ್ಥೆ ಮೂಲಕ ಗಣೇಶೋತ್ಸವ ಮಂಡಳಗಳಿಗೆ ಅಗತ್ಯ ಅನುಮತಿ ನೀಡಲು ಸಂಬಂಧಿಸಿದ ಇಲಾಖೆಗಳ ಸಮನ್ವಯದೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ADVERTISEMENT

‘ಆಚರಣೆಗೆ ಸಂಬಂಧಿಸಿದಂತೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಕೋವಿಡ್ ನಿಯಮಾವಳಿ ಪಾಲಿಸುವುದು ಕಡ್ಡಾಯವಾಗಿದೆ. 20ಕ್ಕಿಂತ ಹೆಚ್ಚು ಜನರು ಒಂದೆಡೆ ಸೇರಬಾರದು. ಆಯೋಜಕರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಒಂದು ವೇಳೆ ಲಸಿಕೆ ಹಾಕಿಸಿರದಿದ್ದರೆ ಆರೋಗ್ಯ ಇಲಾಖೆ ವತಿಯಿಂದ ವ್ಯವಸ್ಥೆ ಮಾಡಲಾಗುವುದು’ ಎಂದು ತಿಳಿಸಿದರು.

ಕಾರ್ಯಕ್ರಮ ನಿಷೇಧ:‘ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ರೀತಿಯ ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮಗಳು, ಡಿಜೆ, ನೃತ್ಯ ಮತ್ತಿತರ ಮನೋರಂಜನಾ ಕಾರ್ಯಕ್ರಮ ಹಮ್ಮಿಕೊಳ್ಳಬಾರದು. ಗಣೇಶ ಮೂರ್ತಿಗಳ ಪ್ರತಿಷ್ಠಾನ ಹಾಗೂ ವಿಸರ್ಜನೆ ವೇಳೆ ಮೆರವಣಿಗೆ ನಿಷೇಧಿಸಲಾಗಿದೆ’ ಎಂದು ಸ್ಪಷ್ಟಪಡಿಸಿದರು.

‘ನಗರಪಾಲಿಕೆ‌ಯಿಂದ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ವಿಸರ್ಜನೆಗೆ ಅವಕಾಶ ಕಲ್ಪಿಸಲಾಗಿದೆ. ಬಡಾವಣೆಗಳಿಗೆ ಮೊಬೈಲ್ ಟ್ಯಾಂಕ್‌ಗಳನ್ನು ಕೂಡ ಒದಗಿಸಲಾಗುತ್ತದೆ. ಕೃತಕ ಹೊಂಡಗಳನ್ನು ಕೂಡ ಪಾಲಿಕೆ ವತಿಯಿಂದ ನಿರ್ಮಿಸಲಾಗುವುದು. ಗಣೇಶೋತ್ಸವ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು. ಜನಸಂದಣಿ ಉಂಟಾಗದಂತೆ ಆಯೋಜಕರು ಕ್ರಮ ಕೈಗೊಳ್ಳಬೇಕು. ಮಾಸ್ಕ್ ಮತ್ತು ಸ್ಯಾನಿಟೈಸರ್‌ ಬಳಕೆಯನ್ನು ಕಡ್ಡಾಯಗೊಳಿಸಬೇಕು. ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಆದೇಶ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕ್ರಮಗಳನ್ನು ತೆಗೆದುಕೊಳ್ಳಲು‌ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಎಲ್ಲ ಮಹಾಮಂಡಳಗಳು ಸಹಕರಿಸಬೇಕು’ ಎಂದು ತಿಳಿಸಿದರು.

ಐದು ದಿನಗಳ ಮಿತಿಗೆ ವಿರೋಧ:ಲೋಕಮಾನ್ಯ ಟಿಳಕ ಗಣೇಶೋತ್ಸವ ಮಹಾಮಂಡಳದ ಅಧ್ಯಕ್ಷ ವಿಜಯ ಜಾಧವ ಮಾತನಾಡಿ, ‘ಇಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬಹಳಷ್ಟು ದೊಡ್ಡ ಇತಿಹಾಸವಿದೆ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು 2 ವರ್ಷಗಳಿಂದ ಪಾಲಿಸಿದ್ದೇವೆ. ಆದರೆ, ಈ‌ ಬಾರಿ ಐದು ದಿನಗಳಿಗೆ ಮಾತ್ರ ‌ಉತ್ಸವವನ್ನು ಮಿತಿಗೊಳಿಸಿರುವುದಕ್ಕೆ ತಮ್ಮ ವಿರೋಧವಿದೆ’ ಎಂದು ಹೇಳಿದರು.

‘ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದು; ಸೇರಿದಂತೆ ಎಲ್ಲ ನಿಯಮಗಳನ್ನು ಪಾಲಿಸಲಾಗುವುದು. ಆದರೆ, ಸಂಪ್ರದಾಯದ ಪ್ರಕಾರ ಹತ್ತು ದಿನಗಳ ಉತ್ಸವ ಆಚರಿಸಲು ಅವಕಾಶ ಕಲ್ಪಿಸಬೇಕು. ಗಣೇಶೋತ್ಸವವನ್ನು ಐದು‌ ದಿನಗಳಿಗೆ ನಿರ್ಬಂಧಿಸಿರುವುದರಿಂದ ಗೊಂದಲ ಉಂಟಾಗಿದೆ. ಇದನ್ನು ಬಗೆಹರಿಸಬೇಕು’ ಎಂದು ಕೋರಿದರು.

ಶಹಾಪುರ ವಿಭಾಗದ ನೇತಾಜಿ ಜಾಧವ ಮಾತನಾಡಿ, ‘ಗಣೇಶೋತ್ಸವವನ್ನು 5 ದಿನಗಳಿಗೆ ಮಿತಿಗೊಳಿಸಿರುವುದು ಚರ್ಚೆಗೆ ಕಾರಣವಾಗಿದೆ. ಉತ್ಸವಕ್ಕೆ ಕೆಲವೇ ದಿನಗಳಿರುವಾಗ ಈ ರೀತಿಯ ಮಿತಿ‌ ವಿಧಿಸುವ ಮೂಲಕ ಸಂಪ್ರದಾಯಕ್ಕೆ ನಿರ್ಬಂಧ ವಿಧಿಸಿದಂತಾಗಿದೆ. ಈ ಬಗ್ಗೆ ಶೀಘ್ರ ಸೂಕ್ತ ನಿರ್ಧಾರ ಪ್ರಕಟಿಸುವ ಮೂಲಕ ಉಳಿದ‌ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಉತ್ಸವ ಆಚರಣೆಗೆ ಅನುಕೂಲ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ಏಕಗವಾಕ್ಷಿ ವ್ಯವಸ್ಥೆ ಮೂಲಕ ‌ಗಣೇಶೋತ್ಸವಕ್ಕೆ‌ ಅಗತ್ಯ ಅನುಮತಿ ನೀಡಲು ವಿವಿಧ ಮಹಾಮಂಡಳಿಗಳ ಪದಾಧಿಕಾರಿಗಳು ಮನವಿ ಮಾಡಿದರು. ಹಿಂದೂ ಭಕ್ತರ ಸಂಪ್ರದಾಯ ಹಾಗೂ ಭಾವನೆಗಳನ್ನು ಅರ್ಥ ಮಾಡಿಕೊಂಡು ಐದು ದಿನಗಳ ಬದಲಾಗಿ ಹತ್ತು ದಿನಗಳ ಉತ್ಸವಕ್ಕೆ ಅವಕಾಶ ಕಲ್ಪಿಸಬೇಕು ಎಂದು ‌ಎಲ್ಲರೂ ಒಕ್ಕೊರಲಿನಿಂದ ಆಗ್ರಹಿಸಿದರು.

ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್, ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಚ್‌.ವಿ. ದರ್ಶನ್, ಡಿಸಿಪಿ ವಿಕ್ರಂ ಅಮಟೆ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ್ ಘಾಳಿ ಪಾಲ್ಗೊಂಡಿದ್ದರು.

ನೆರೆಯ ಮಹಾರಾಷ್ಟ್ರದಲ್ಲಿ 2 ದಿನಗಳಿಂದ ಕೋವಿಡ್ ಪ್ರಮಾಣ ಏರಿಕೆಯಾಗಿದೆ. ಕೋವಿಡ್ ನಿಯಂತ್ರಣ ದೃಷ್ಟಿಯಿಂದ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಅದನ್ನು ಎಲ್ಲರೂ ಪಾಲಿಸಬೇಕು.

- ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.