
ಗೋಕಾಕ ತಾಲ್ಲೂಕಿನ ಘಟಪ್ರಭಾ ಸಮೀಪ ಘಟಪ್ರಭಾ ಎಡದಂಡೆ ಕಾಲುವೆಗೆ ಅಡ್ಡಲಾಗಿ ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಿದ ಹಳೆಯ ಸೇತುವೆಯಲ್ಲಿ ಬಿರುಕು ಕಾಣಿಸಿದ್ದರಿಂದ ಜನ ಹಾಗೂ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ
ಘಟಪ್ರಭಾ (ಗೋಕಾಕ): ಸಂಕೇಶ್ವರ-ನರಗುಂದ ರಾಜ್ಯ ಹೆದ್ದಾರಿಯ ಭಾಗವಾಗಿರುವ ಇಲ್ಲಿಗೆ ಸಮೀಪದ ಘಟಪ್ರಭಾ ಎಡದಂಡೆ ಕಾಲುವೆಗೆ ಅಡ್ಡಲಾಗಿ ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಿರಬಹುದಾದ ಹಳೆಯ ಸೇತುವೆ ಮೇಲೆ ಮಂಗಳವಾರ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸೇತುವೆ ಮೇಲಿನ ಜನ ಮತ್ತು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಕರ್ನಾಟಕ ನೀರಾವರಿ ಇಲಾಖೆಯಿಂದ ನಿರ್ಮಿಸಿದ ಈ ಕಿರಿದಾದ ಸೇತುವೆ ಅಡಿಯಲ್ಲಿ ಕಲ್ಲಿನ ಬಾಂಧಕಂಬವು ಕುಸಿದ ಪರಿಣಾಮ ಸೇತುವೆಯಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ.
ದಿಢೀರ್ ಸೇತುವೆ ಕುಸಿತದಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಪರ್ಯಾಯ ಮಾರ್ಗವಾಗಿ ವಾಹನಗಳು ಗೋಕಾಕ-ಫಾಲ್ಸ್ ಮತ್ತು ಧುಪದಾಳ ಮಾರ್ಗವಾಗಿ ಓಡಾಡುತ್ತಿವೆ.
ಈ ಕುರಿತ ಮಾಹಿತಿ ಲಭಿಸುತ್ತಲೇ ನೀರಾವರಿ, ಲೋಕೋಪಯೋಗಿ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೇತುವೆ ಪುನರ್ ನಿರ್ಮಾಣಕ್ಕೆ ಹಲವು ತಿಂಗಳುಗಳ ಅವಧಿ ತೆಗೆದುಕೊಳ್ಳಬಹುದು ಎಂದು ಸಂಬಂಧಿಸಿದ ಅಧಿಕಾರಿಗಳು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.