ಬೆಳಗಾವಿ: ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶನಿವಾರ ಬಿಟ್ಟೂ ಬಿಟ್ಟು ಜೋರು ಮಳೆಯಾಯಿತು.
ಸವದತ್ತಿ ತಾಲ್ಲೂಕಿನ ಮಲಪ್ರಭಾ (ನವಿಲುತೀರ್ಥ) ಜಲಾಶಯ ಶೇ 82ರಷ್ಟು ಭರ್ತಿಯಾಗಿದ್ದು, ನದಿಗೆ ನೀರು ಬಿಡುಗಡೆ ಪ್ರಮಾಣವನ್ನು ಕ್ರಮೇಣ ಹೆಚ್ಚಿಸಲಾಗುವುದು ಎಂದು ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಸೇರುವ ನೀರಿನ ಪ್ರಮಾಣ ಕೊಂಚ ಜಾಸ್ತಿಯಾಗಿದೆ. ರಾಜಾಪೂರ ಜಲಾಶಯದಿಂದ 82ಸಾವಿರ ಕ್ಯುಸೆಕ್ ಹಾಗೂ ದೂಧ್ಗಂಗಾ ನದಿಯಿಂದ 14ಸಾವಿರ ಕ್ಯುಸೆಕ್ ಸೇರಿ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 96ಸಾವಿರ ಕ್ಯುಸೆಕ್ ನೀರು ಸೇರಿಕೊಳ್ಳುತ್ತಿದೆ.
ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದ ಪರಿಸರದಲ್ಲಿ ಭಾನುವಾರ ಬೆಳಿಗ್ಗೆ ಲಘು ಭೂಕಂಪದ ವರದಿಯಾಗಿದೆ. ಇದು ತೀರದ ಜನರಲ್ಲಿನ ಆತಂಕಕ್ಕೆ ಕಾರಣವಾಗಿದೆ. ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗುವುದು ಎಂದು ಹೇಳಲಾಗುತ್ತಿದೆ.
‘ಆ ಪ್ರದೇಶದಲ್ಲಿ ಆಗಾಗ ಲಘು ಭೂಕಂಪ ಸಾಮಾನ್ಯ ಎನ್ನುವಂತಾಗಿದೆ. ಇದರಿಂದ ಆತಂಕ ಪಡುವ ಅಗತ್ಯವಿಲ್ಲ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
‘ಕೊಯ್ನಾ ಜಲಾಶಯ ಇನ್ನೂ ಭರ್ತಿಯಾಗಿಲ್ಲ. ಹೀಗಾಗಿ, ಸದ್ಯಕ್ಕೆ ಅಲ್ಲಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವ ಸಾಧ್ಯತೆ ಇಲ್ಲ’ ಎಂದು ಚಿಕ್ಕೋಡಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣನವರ ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.