ಉಗರಗೋಳ: ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ‘ಗೌರಿ ಹುಣ್ಣಿಮೆ’ ಅಂಗವಾಗಿ ಶುಕ್ರವಾರ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಆದಿಶಕ್ತಿ ರೇಣುಕಾ ಯಲ್ಲಮ್ಮನ ಸನ್ನಿಧಿಗೆ ಭಕ್ತಸಾಗರವೆ ಹರಿದುಬಂದಿತ್ತು. ಜೋರು ಮಳೆಯನ್ನೂ ಲೆಕ್ಕಿಸದೆ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದು ಪುನೀತ ಭಾವ ತಳೆದರು.
ಗುರುವಾರ ಮಧ್ಯ ರಾತ್ರಿ ಆರಂಭವಾದ ಮಳೆ ಶುಕ್ರವಾರ ಸಂಜೆಯವರೆಗೂ ಮುಂದುವರಿದಿತ್ತು. ಆದರೆ, ಭಕ್ತರ ಆಗಮನ ನಿಂತಿರಲಿಲ್ಲ.
ಕರ್ನಾಟಕದೊಂದಿಗೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಂದಲೂ ಸಹಸ್ರಾರು ಭಕ್ತರು ಗುಡ್ಡದತ್ತ ಹೆಜ್ಜೆ ಹಾಕಿದರು. ಯಲ್ಲಮ್ಮ ದೇವಸ್ಥಾನದಿಂದ ಪ್ರವೇಶದ್ವಾರದವರೆಗೂ ಸಾವಿರಾರು ಸಂಖ್ಯೆಯಲ್ಲಿ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತಿದ್ದರು. ಮಕ್ಕಳು, ಯುವಕ-ಯುವತಿಯರು, ಮಹಿಳೆಯರು, ಹಿರಿಯರು ಕೊಡೆಗಳ ಆಸರೆಯಲ್ಲಿ ಬಂದರು. ‘ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ’ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಮಳೆಯಿಂದಾಗಿ ವ್ಯಾಪಾರ- ವಹಿವಾಟಿಗೆ ತೊಡಕಾಯಿತು. ಕುಂಕುಮ-ಭಂಡಾರ, ಕಾಯಿ, ಕರ್ಪೂರ ಮಾರುವ ವ್ಯಾಪಾರಿಗಳಿಗೆ ತೊಂದರೆಯಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.