
ಚನ್ನಮ್ಮನ ಕಿತ್ತೂರು: ‘15ನೇ ಹಣಕಾಸು ಆಯೋಗದ ಅನುದಾನ, ಉದ್ಯೋಗ ಖಾತ್ರಿ ಯೋಜನೆಯ ಸಾಮಗ್ರಿ ವೆಚ್ಚ ಬಿಡುಗಡೆ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ ನೇತೃತ್ವದಲ್ಲಿ ಡಿ.9 ರಂದು ಗ್ರಾಮ ಪಂಚಾಯಿತಿ ಸದಸ್ಯರ ವತಿಯಿಂದ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ಘಟಕದ ಸಹಕಾರ್ಯದರ್ಶಿ ಮಹಾಂತೇಶ ಪಾಶ್ಚಾಪುರ ತಿಳಿಸಿದರು.
ಭಾನುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, 15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆಯಾಗದೆ ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಈಗಾಗಲೇ ನಡೆಸಿರುವ ಕಾಮಗಾರಿಗಳಿಗೆ ಸಂಬಂಧಿಸಿದ ಸಾಮಗ್ರಿ ವೆಚ್ಚ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಮಹಾಒಕ್ಕೂಟವು 28 ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಹೋರಾಟ ಮಾಡಿತ್ತು. ಅವುಗಳಲ್ಲಿ ಕೆಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಉಳಿದ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಮಹಾಒಕ್ಕೂಟದ ಪದಾಧಿಕಾರಿಗಳಾದ ದೇಸಾಯಿ ಗಾಳಿ, ಉಮೇಶ ಶಿದ್ರಾಮನಿ, ಚಂದ್ರಶೇಖರ ಕಡೇಮನಿ, ಕಾಸೀಂಸಾಬ ಹಟ್ಟಿಹೊಳಿ, ಉಮೇಶ ಕದಂ, ಶಿವಪುತ್ರ ತಳವಾರ, ಬಸವರಾಜ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.