ಬೆಳಗಾವಿ: ಕಿತ್ತೂರು ಉತ್ಸವ ಅಂಗವಾಗಿ ಜಿಲ್ಲೆಯಲ್ಲಿ ಸಂಚರಿಸುತ್ತಿರುವ ವೀರಜ್ಯೋತಿಯನ್ನು ಬುಧವಾರ ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಜಿಲ್ಲಾಡಳಿತದಿಂದ ಸಂಭ್ರಮದಿಂದ ಸ್ವಾಗತಿಸಲಾಯಿತು.
ಖಾನಾಪುರದಿಂದ ಬಂದ ವಾಹನಕ್ಕೆ ಸಂಸದ ಸುರೇಶ ಅಂಗಡಿ, ಶಾಸಕ ಅನಿಲ್ ಬೆನಕೆ ಹಾಗೂ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಮಾಲಾರ್ಪಣೆ ಮಾಡಿ, ಪೂಜೆ ಸಲ್ಲಿಸಿ ಬರಮಾಡಿಕೊಂಡರು.
ನಂತರ ಮಾತನಾಡಿದ ಸಂಸದರು, ‘ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ವೀರ ರಾಣಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ ಅಂಗವಾಗಿ ಪ್ರತಿ ವರ್ಷ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಅದ್ಧೂರಿಯಾಗಿ ನಡೆಸಲು ಸರ್ಕಾರ ಹೆಚ್ಚಿನ ನೆರವು ಒದಗಿಸಬೇಕು’ ಎಂದರು.
ಚನ್ನಮ್ಮ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಯಿತು. ಉಪ ವಿಭಾಗಾಧಿಕಾರಿ ಕವಿತಾ ಯೋಗಪ್ಪನವರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಭಾರ ಉಪನಿರ್ದೇಶಕ ಗುರುನಾಥ ಕಡಬೂರ, ತಹಶೀಲ್ದಾರ್ ಮಂಜುಳಾ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಕರಿಶಂಕರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.