ಬೆಳಗಾವಿ: ‘ಪೌರಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸಿಗುವ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಹಾಗೂ ಅವರ ಆರೋಗ್ಯ ತಪಾಸಣಾ ಶಿಬಿರವನ್ನು ಜ. 20ರಂದು ಬೆಳಿಗ್ಗೆ 10ಕ್ಕೆ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್ನಲ್ಲಿ ಆಯೋಜಿಸಲಾಗಿದೆ’ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
‘ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗ, ರೈಲ್ವೆ ಇಲಾಖೆ ಮತ್ತು ಜಿಲ್ಲಾಡಳಿತದ ವತಿಯಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಆಯೋಗದ ಅಧ್ಯಕ್ಷ ಎಂ. ವಲ್ಜಿಬಾಯಿ ಜಾಲಾ ಉದ್ಘಾಟಿಸುವರು. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭಾಗವಹಿಸಲಿದ್ದಾರೆ. ಕಾರ್ಮಿಕರಿಗೆ ಪುರಸ್ಕಾರ ನೀಡಿ ಗೌರವಿಸಲಾಗುವುದು. ಅವರಿಗೆ ಮಾನಸಿಕವಾಗಿ ಧೈರ್ಯ ನೀಡುವುದು ಕಾರ್ಯಾಗಾರದ ಉದ್ದೇಶವಾಗಿದೆ’ ಎಂದ ಮಾಹಿತಿ ನೀಡಿದರು.
‘ರಾಜ್ಯದಲ್ಲಿಯೇ ಬೆಳಗಾವಿಯಲ್ಲಿ ಹೆಚ್ಚು ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಬೆಳಗಾವಿ ನಗರವೊಂದರಲ್ಲೇ 2,082 ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ’ ಎಂದರು.
ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ‘ಪೌರಕಾರ್ಮಿಕರಿಗೆ ಮಾಸ್ಟರ್ ಚಿಕಿತ್ಸೆ ನೀಡಲು ಕೆ.ಎಲ್.ಇ. ಆಸ್ಪತ್ರೆ ಜೊತೆ ಒಪ್ಪಂದ ಮಾಡಿಕೊಂಡು ₹ 30 ಲಕ್ಷ ವೆಚ್ಚದ ಯೋಜನೆ ಹಾಕಿಕೊಂಡ್ಡಿದ್ದೇವೆ’ ಎಂದು ತಿಳಿಸಿದರು.
ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ್ ಹೊನಕೇರಿ, ‘ಪೌರಕಾರ್ಮಿಕರಿಗೆ 2 ಜೊತೆ ಸಮವಸ್ತ್ರ, ಶೂ ಹಾಗೂ ಮಾಸ್ಕ್ ಕೊಡಲಾಗುತ್ತಿದೆ’ ಎಂದರು.
ಮಲ ಹೊರುವ ಪದ್ಧತಿ (ಮ್ಯಾನ್ಯುಯೆಲ್ ಸ್ಕ್ಯಾವೇಂಜರ್) ಬಗ್ಗೆ ಮಾಹಿತಿ ಪಡೆದ ಸದಸ್ಯರು, ‘ಅಧಿಕಾರಿಗಳು ನೀಡಿದ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ ‘ಮ್ಯಾನ್ಯುಯೆಲ್ ಸ್ಕ್ಯಾವೆಂಜರ್’ ಕಂಡುಬಂದಿಲ್ಲ. ಆದರೆ, ಎನ್ಜಿಒಗಳ ಪ್ರಕಾರ 156 ಮಂದಿ ಇದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ, ಅವರಿಂದ ದಾಖಲೆಯನ್ನು ಪಡೆದು ಮತ್ತೊಮ್ಮೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಸಮಾಜಕಲ್ಯಾಣ ಇಲಾಖೆ ಹಾಗೂ ನಗರಪಾಲಿಕೆ ಅಧೀಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.