
ಕಡತ
(ಸಾಂದರ್ಭಿಕ ಚಿತ್ರ)
ಬೆಳಗಾವಿ: ‘ಬೆಳಗಾವಿಯಲ್ಲಿ ನ.1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಆಯೋಜಿಸಿದ್ದ ಕರಾಳ ದಿನಾಚರಣೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ನನಗೆ ಬೆಳಗಾವಿ ಪ್ರವೇಶ ನಿಷೇಧಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಮಹಾರಾಷ್ಟ್ರದ ಹಾತಕಣಗಲೆ ಕ್ಷೇತ್ರದ ಸಂಸದ ಧೈರ್ಯಶೀಲ ಮಾನೆ ಅವರು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ನೀಡಿದ್ದಾರೆ.
‘ಪ್ರತಿವರ್ಷ ಎಂಇಎಸ್ನವರು ಮತ್ತು ಮರಾಠಿ ಭಾಷಿಕರು ಬೆಳಗಾವಿಯಲ್ಲಿ ಕರಾಳ ದಿನ ಆಚರಿಸುತ್ತಾರೆ. ನನಗೆ ಯಾವುದೇ ಅಪರಾಧಿಕ ಹಿನ್ನೆಲೆ ಇಲ್ಲ. ಆದರೂ, ಮೊಹಮ್ಮದ್ ರೋಷನ್ ಅಧಿಕಾರ ದುರ್ಬಳಕೆ ಮಾಡಿಕೊಂಡು ನಾನು ಬೆಳಗಾವಿಗೆ ಬರುವುದನ್ನು ತಡೆಹಿಡಿದಿದ್ದಾರೆ. ನನ್ನ ಹಕ್ಕು ಕಸಿದ ಅವರ ವಿರುದ್ಧ ಮಾನವ ಹಕ್ಕು ಉಲ್ಲಂಘನೆ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಮಾನೆ ಅವರ ನಿಲುವಿಗೆ ಗಡಿಯಲ್ಲಿ ಕನ್ನಡ ಹೋರಾಟಗಾರರಿಂದ ಆಕ್ಷೇಪ ವ್ಯಕ್ತವಾಗಿದೆ.
‘ಭಾಷೆ ಮತ್ತು ಗಡಿ ವಿಷಯದಲ್ಲಿ ಮರಾಠಿಗರನ್ನು ಪ್ರಚೋದಿಸಲು ಬರುತ್ತಿದ್ದ ಧೈರ್ಯಶೀಲ ಮಾನೆ ಬೆಳಗಾವಿಗೆ ಬರುವುದನ್ನು ತಡೆದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕ್ರಮ ಸೂಕ್ತವಾಗಿದೆ. ಮಾನೆ ಅವರು ಲೋಕಸಭಾ ಸ್ಪೀಕರ್ಗೆ ದೂರು ನೀಡಿದ್ದು ಖಂಡನೀಯ’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.