ADVERTISEMENT

ವಿವೇಕರಾವ್ ಬಿಜೆಪಿಗೆ ಆಹ್ವಾನಿಸುವೆ: ರಮೇಶ ಜಾರಕಿಹೊಳಿ

ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2021, 13:59 IST
Last Updated 19 ನವೆಂಬರ್ 2021, 13:59 IST
ಗೋಕಾಕ ಹೊರವಲಯದ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು
ಗೋಕಾಕ ಹೊರವಲಯದ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು   

ಗೋಕಾಕ: ‘ವಿಧಾನಪರಿಷತ್‌ ಹಾಲಿ ಸದಸ್ಯ ವಿವೇಕರಾವ್ ಪಾಟೀಲ ಅವರನ್ನು ವರಿಷ್ಠರು ಒಪ್ಪಿದರೆ ಬಿಜೆಪಿಗೆ ಕರೆತರುತ್ತೇನೆ’ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಹೊರವಲಯದ ಬಸವೇಶ್ವರ ಸಭಾಭವನದಲ್ಲಿ ಬಿಜೆಪಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಆರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ವಿವೇಕರಾವ್‌ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದ್ದರಿಂದ ಅನ್ಯಾಯವಾಗಿದೆ. ಬಿಜೆಪಿ ಬೆಂಬಲಿಸಲು ಅವರಲ್ಲಿ ಮನವಿ ಮಾಡುತ್ತೇನೆ’ ಎಂದರು.

ADVERTISEMENT

‘ಕಳೆದ ಬಾರಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ವರ್ಧಿಸಿದ್ದ ವಿವೇಕರಾವ್ ಪಾಟೀಲ ಅವರಿಗೆ ನಾವು ಬೆಂಬಲ ನೀಡಿದ್ದರಿಂದ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲುವು ಅಷ್ಟೊಂದು ಸುಲಭವಾಗಿರಲಿಲ್ಲ. ಆದರೆ ಈ ಬಾರಿ ಹಾಗೆ ಆಗುವುದಿಲ್ಲ. ಹೆಚ್ಚಿನ ಅಂತರದಿಂದ ಗೆಲ್ಲಿಸಲು ಶ್ರಮಿಸಲಾಗುವುದು’ ಎಂದು ಹೇಳಿದರು.

‘ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದ್ದು ಸ್ವಾಗತಾರ್ಹವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ರೈತರ ಹಿತ ಕಾಪಾಡಲು ಈ ನಿರ್ಣಯ ತಗೆದುಕೊಂಡಿದ್ದಾರೆ. ಇದರಿಂದ ಭವಿಷ್ಯದಲ್ಲಿ ಅನುಕೂಲ ಆಗಲಿದೆ’ ಎಂದರು.

ಮುಖಂಡ ಎಂ.ಎಲ್. ಮುತ್ತೆಣ್ಣವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಒಬಿಸಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ಪ್ರೇಮಾ ಭಂಡಾರಿ, ಸುಭಾಷ ಪಾಟೀಲ, ಘಟಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ, ರಾಜೇಂದ್ರ ಗೌಡಪ್ಪಗೋಳ, ಸುರೇಶ ಪಾಟೀಲ, ಭೀಮಶಿ ಭರಮನ್ನವರ, ಮಡ್ಡೆಪ್ಪ ತೋಳಿನವರ, ನಗರಸಭೆ ಸದಸ್ಯ ಅಬ್ಬಾಸ ದೇಸಾಯಿ, ಡಿ.ಎಂ. ದಳವಾಯಿ, ಡಾ.ಜಿ.ಆರ್. ಸೂರ್ಯವಂಶಿ ಇದ್ದರು.

ಎಲ್.ಎಚ್. ಬಂಡಿ ಸ್ವಾಗತಿಸಿದರು. ಮುಖಂಡ ತುಕಾರಾಮ ಕಾಗಲ ಪ್ರಾಸ್ತಾವಿಕ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.