ADVERTISEMENT

ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸ್ಪರ್ಧಿಸಿರುವೆ: ಚನ್ನರಾಜ ಹಟ್ಟಿಹೊಳಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 11:11 IST
Last Updated 23 ನವೆಂಬರ್ 2021, 11:11 IST
   

ಬೆಳಗಾವಿ: ‘ವಿಧಾನಪರಿಷತ್‌ ಚುನಾವಣೆಯಲ್ಲಿ ವರಿಷ್ಠರೆಲ್ಲರ ಆಶೀರ್ವಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೇನೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಹೇಳಿದರು.

ನಾಮಪತ್ರ ಸಲ್ಲಿಕೆ ವೇಳೆ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಜಿಲ್ಲೆಯಾದ್ಯಂತ ಪಕ್ಷ ಗಟ್ಟಿಯಾಗಬೇಕು ಮತ್ತು ಒಳ್ಳೆಯ ವಾತಾವರಣ ಸೃಷ್ಟಿಯಾಗಬೇಕು ಎನ್ನುವ ಕಾರ್ಯಸೂಚಿ ಇಟ್ಟುಕೊಂಡು ಈ ಚುನಾವಣೆಯಲ್ಲಿ ಗೆಲ್ಲಬೇಕೆನ್ನುವ ಗುರಿ ಹೊಂದಿದ್ದೇವೆ’ ಎಂದರು.

‘ಕಣದಲ್ಲಿರುವ ಎಲ್ಲರೂ ಪ್ರತಿಸ್ಪರ್ಧಿಗಳೆ. ಅವರಿವರು ಎಂದು ವಿಶೇಷವಾಗಿ ಹೇಳುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

‘ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಪಕ್ಷದವರು ಅಥವಾ ಬೆಂಬಲಿತರು 4,100ಕ್ಕೂ ಹೆಚ್ಚು ಸದಸ್ಯರು ಗೆದ್ದಿದ್ದಾರೆ. ಅವರೆಲ್ಲರ ಬೆಂಬಲ ನಮಗಿದೆ. ಹೀಗಾಗಿ ಗೆಲುವು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಮೇಶ ಜಾರಕಿಹೊಳಿ ಟೀಕೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.