ಬೆಳಗಾವಿ: ‘ನಗರದ ಸುತ್ತಲಿನ ರಿಂಗ್ ರಸ್ತೆ ಕಾಮಗಾರಿಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಸಂಸದ ಜಗದೀಶ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅವರು, ಬೆಳಗಾವಿ–ಹುನಗುಂದ– ರಾಯಚೂರು ಮಾರ್ಗದ ರಸ್ತೆ ನಿರ್ಮಾಣ ಹಾಗೂ ಬೆಳಗಾವಿ–ಕಿತ್ತೂರು–ಧಾರವಾಡ ರೈಲ್ವೆ ಮಾರ್ಗ ನಿರ್ಮಾಣ ಹಂತದ ಪ್ರಕ್ರಿಯೆ ಕುರಿತು ಚರ್ಚಿಸಿದರು. ಎರಡೂ ಕಾಮಗಾರಿಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಬೇಕೆಂದೂ ಸೂಚಿಸಿದರು.
ಬೆಳಗಾವಿ ನಗರದ ರಸ್ತೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿ ಕುರಿತು ಚರ್ಚೆ ನಡೆಸಿ, ರೈಲ್ವೆ 3ನೇ ಗೇಟ್ ಹತ್ತಿರ ನಿರ್ಮಾಣಗೊಳ್ಳುತ್ತಿರುವ ಕಾಮಗಾರಿಯು ಅರ್ಧಕ್ಕೆ ನಿಂತ ವಿಷಯ ಪ್ರಸ್ತಾಪಿಸಿದರು. ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ, ಉಪ ಪೊಲೀಸ್ ಆಯುಕ್ತ ರೋಹನ್ ಜಗದೀಶ್, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟೆ, ಎನ್ಎಚ್ಎಐ ಯೋಜನಾ ನಿರ್ದೇಶಕ ಭುವನೇಶ್ವರ ಕುಮಾರ್, ಭೂಸ್ವಾಧೀನ ಅಧಿಕಾರಿ ಚೌಹಾಣ್, ನೈಋತ್ಯ ರೈಲ್ವೆ ವಲಯದ ಅಧಿಕಾರಿ ವಿನಯ್ ಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಬರದ, ರೈಲ್ವೆ ಲೈನ್ ಭೂ ಸ್ವಾಧೀನ ಅಧಿಕಾರಿ ಮಾರುತಿ ಬ್ಯಾಕೋಡ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.