ಬೆಳಗಾವಿ: ತಾಲ್ಲೂಕಿನ ಗೌಂಡವಾಡ ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ ಶಾಸಕ ಸತೀಶ ಜಾರಕಿಹೊಳಿ, ಈಚೆಗೆ ಹತ್ಯೆಯಾದ ಸತೀಶ ಪಾಟೀಲ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
‘ಪೊಲೀಸರ ವೈಫಲ್ಯವೇ ಈ ಘಟನೆಗೆ ಕಾರಣ ಎನ್ನುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಈ ಮುಂಚೆ ಕೂಡ ಸತೀಶ ಪಾಟೀಲ ಮೇಲೆ ದಾಳಿ ನಡೆದಿತ್ತು. ಕಾಕತಿ ಪೊಲೀಸ್ ಠಾಣೆಯಲ್ಲಿ ಬಹಳ ವರ್ಷದಿಂದ ಪೊಲೀಸ್ ಸಿಬ್ಬಂದಿ ಠಿಕಾಣಿ ಹೂಡಿದ್ದಾರೆ. ಹೀಗಾಗಿ ಜನರಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ. ಈ ಕುರಿತು ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡುತ್ತೇನೆ’ ಎಂದು ಸತೀಶ ಜಾರಿಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
‘ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೇವಲ 12 ಜನರನ್ನು ಬಂಧಿಸಿದ್ದಾರೆ. ಈ ಕುರಿತು ಸರಿಯಾದ ತನಿಖೆ ಮಾಡಿ, ಈ ಘಟನೆಗೆ ಯಾರೆಲ್ಲ ಕಾರಣರಾಗಿದ್ದಾರೋ ಅವರನ್ನು ಬಂಧಿಸಬೇಕು. ಇನ್ನೂ ಅಮಾಯಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು’ ಎಂದರು.
ಇದೇ ವೇಳೆ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಮಾತನಾಡಿದ ಶಾಸಕ, ‘ಗೌಂಡವಾಡ ಗ್ರಾಮಸ್ಥರು ಭಯ ಪಡುವ ಅವಶಕತೆ ಇಲ್ಲ. ತೊಂದರೆ ಆಗದಂತೆ ನೋಡಿಕೊಳ್ಳಲು ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡಲಾಗುವುದು. ಸತೀಶ ಪಾಟೀಲ ಕುಟುಂಬಸ್ಥರಿಗೆ ನ್ಯಾಯ ಕೊಡಿಸಲಾಗುವುದು’ ಎಂದು ಭರವಸೆ ನೀಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಪ್ರದೀಪ ಎಂ.ಜೆ., ಮಲಗೌಡ ಪಾಟೀಲ, ಪೂಜಾ ಸತೀಶ ಪಾಟೀಲ, ನಳಿನಿ ಪಾಟೀಲ, ಸುಮ್ಮಣ ಪಾಟೀಲ, ಗಂಗಾ ರಾಮ ಪಾಟೀಲ ಹಾಗೂ ಗ್ರಾಮಸ್ಥರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.