ADVERTISEMENT

ಖಾಲಿ ಇರುವ ಹುದ್ದೆಗಳನ್ನು ಭರ್ತಿಗೊಳಿಸಿ: ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 8:32 IST
Last Updated 8 ಅಕ್ಟೋಬರ್ 2025, 8:32 IST
<div class="paragraphs"><p>ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ</p><p></p></div>

ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ

   

ಬೆಳಗಾವಿ: ‘ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು’ ಎಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ADVERTISEMENT

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ನೇಮಕಾತಿಗೆ ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2.86 ಲಕ್ಷ ಹುದ್ದೆ ಖಾಲಿ ಇವೆ. ಅವುಗಳ ಭರ್ತಿಗೆ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಗುತ್ತಿಗೆ ಆಧಾರದಲ್ಲೇ ಅತ್ಯಲ್ಪ ಸಂಬಳಕ್ಕೆ ಜನರನ್ನು ದುಡಿಸಿಕೊಳ್ಳುತ್ತಿದೆ. ಒಳಮೀಸಲಾತಿ ಹೆಸರಿನಲ್ಲಿ ನೇಮಕಾತಿ ಮುಂದೂಡುತ್ತ ಸಾಗಿದೆ. ಉದ್ಯೋಗ ಸಿಗದೆ ಯುವಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ’ ಎಂದು ದೂರಿದರು.

‘ರಾಜ್ಯ ಸರ್ಕಾರದಿಂದ ತಡೆಹಿಡಿದಿರುವ ಎಲ್ಲ ನೇಮಕಾತಿಗಳನ್ನು ತ್ವರಿತವಾಗಿ ಆರಂಭಿಸಿ, ಈ ವರ್ಷಾಂತ್ಯದೊಳಗೆ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೊಳಿಸಬೇಕು. ಕನಿಷ್ಠ ವಯೋಮಿತಿ ಐದು ವರ್ಷ ಸಡಿಲಿಸಬೇಕು’ ಎಂದು ಒತ್ತಾಯಿಸಿದರು. ಮುಖಂಡ ರಾಜೀವ ಗಾಣಗಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.

‘ನಾಮಫಲಕಗಳಲ್ಲಿ ಕನ್ನಡಕ್ಕೆ ಅಗಸ್ಥಾನ ನೀಡಲಿ’

ಬೆಳಗಾವಿ: ‘ಇಲ್ಲಿ ಮಹಾನಗರ ಪಾಲಿಕೆಯಿಂದ ಅಳವಡಿಸಿದ ನಾಮಫಲಕಗಳಲ್ಲಿ ಕನ್ನಡಕ್ಕೆ ಅಗ್ರಸ್ಥಾನ ನೀಡಬೇಕು’ ಎಂದು ಆಗ್ರಹಿಸಿ ಸರ್ವೋದಯ ಸ್ವಯಂಸೇವಾ ಸಂಘದವರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ಯಾವುದೇ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಭಾಷೆಯನ್ನು ಆದ್ಯತೆ ಮೇಲೆ ಬಳಸಬೇಕು ಎಂದು ಸರ್ಕಾರಿ ನಿಯಮವಿದೆ. ಆದರೆ, ಮಹಾನಗರ ಪಾಲಿಕೆಯು ರಸ್ತೆಗಳು, ಉದ್ಯಾನಗಳು, ವೃತ್ತಗಳು, ಖಾಲಿ ನಿವೇಶನಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಿದ ನಾಮಫಲಕಗಳಲ್ಲಿ ಇದನ್ನು ಉಲ್ಲಂಘಿಸಿದೆ. ಹಾಗಾಗಿ ಪಾಲಿಕೆಯಿಂದ ಅಳವಡಿಸಿದ ಫಲಕಗಳಲ್ಲಿ ಕನ್ನಡಕ್ಕೆ ಅಗ್ರಸ್ಥಾನ ನೀಡಿ, ಸರ್ಕಾರಿ ನಿಯಮ ಪಾಲಿಸಬೇಕು’ ಎಂದು ಒತ್ತಾಯಿಸಿದರು.

ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಮುಖಂಡ ಶ್ರೀನಿವಾಸ ತಾಳೂಕರ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.