ADVERTISEMENT

ಕಿರಿಯ ಎಂಜಿನಿಯರ್ ಅಮಾನತು

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2020, 13:29 IST
Last Updated 7 ಡಿಸೆಂಬರ್ 2020, 13:29 IST

ಬೆಳಗಾವಿ: ಮೂಡಲಗಿ ಪುರಸಭೆಯಲ್ಲಿ ಕಿರಿಯ ಎಂಜಿನಿಯರ್‌ ಆಗಿದ್ದ, ಹಾಲಿ ಚಿಂಚಲಿ ಪಟ್ಟಣ ಪಂಚಾಯ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಎಚ್. ದೊಡ್ಡಮನಿ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೋಮವಾರ ಆದೇಶ ಹೊರಡಿಸಿದ್ದಾರೆ.

‘ಮೂಡಡಲಗಿ ಪುರಸಭೆಯಲ್ಲಿ ಹೈಮಾಸ್ಟ್ ಬೀದಿದೀಪದ ಕಂಬಗಳನ್ನು ಅಳವಡಿಸುವ ಕಾಮಗಾರಿಯಲ್ಲಿ ಸರ್ಕಾರ ನಿಗದಿಪಡಿಸಿದ ದರ (ಎಸ್.ಆರ್. ರೇಟ್)ಕ್ಕಿಂತ ಹೆಚ್ಚಿನ ದರದ ಅಂದಾಜು ಪತ್ರಿಕೆ ತಯಾರಿಸಿ ಸರ್ಕಾರದ ಹಣ ದುರುಪಯೋಗ ಮಾಡಲಾಗಿದೆ. ಈ ತನಿಖೆ ನಡೆಸಿ, ಇದಕ್ಕೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಅವರು ಪೌರಾಡಳಿತ ಇಲಾಖೆ ನಿರ್ದೇಶಕರಿಗೆ ಆ. 27ರಂದು ದೂರು ಸಲ್ಲಿಸಿದ್ದರು.

ನಿರ್ದೇಶನಾಲಯದ ನಿರ್ದೇಶಕರ ಸೂಚನೆ ಮೇರೆಗೆ ಪರಿಶೀಲಿಸಿ ದಾಖಲಾತಿಗಳೊಂದಿಗೆ ವರದಿ ಸಲ್ಲಿಸುವಂತೆ ಮೂಡಲಗಿ ಪುರಸಭೆ ಮುಖ್ಯಾಧಿಕಾರಿಗೆ ಜಿಲ್ಲಾಧಿಕಾರಿ ಕಾರ್ಯಾಲಯದಿಂದ ನಿರ್ದೇಶಿಸಲಾಗಿತ್ತು. ‘ದೊಡ್ಡಮನಿ ಅವರು ಮೂಡಲಗಿ ಪುರಸಭೆಯಲ್ಲಿದ್ದಾಗ, 2018–19ನೇ ಸಾಲಿನಲ್ಲಿ 14ನೇ ಹಣಕಾಸು ಆಯೋಗದ ಸಾಮಾನ್ಯ ಮೂಲ ಅನುದಾನದಲ್ಲಿ ಮೂಡಲಗಿ ಪಟ್ಟಣದ 2 ಪ್ರಮುಖ ವೃತ್ತಗಳಲ್ಲಿ ಹೈಮಾಸ್ಟ್ ಬೀದಿದೀಪ ಅಳವಡಿಸುವ ಕಾಮಗಾರಿ ಅಂದಾಜು ಪತ್ರಿಕೆಯನ್ನು ಎಸ್.ಆರ್. ದರಕ್ಕೆ ವ್ಯತಿರಿಕ್ತವಾಗಿ ತಯಾರಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.ಸರ್ಕಾರದ ನಿಯಮ ಉಲ್ಲಂಘನೆ ಮತ್ತು ಕರ್ತವ್ಯ ಚ್ಯುತಿ ಎಸಗಿರುವುದರಿಂದ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಮುಖ್ಯಾಧಿಕಾರಿ ವರದಿ ಸಲ್ಲಿಸಿದ್ದರು. ಇದನ್ನು ಆಧರಿಸಿ ಅಮಾನತು ಮಾಡಲಾಗಿದೆ.

ADVERTISEMENT

ಆದೇಶದ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.