ADVERTISEMENT

ಕಾಗವಾಡ ವಿಧಾನಸಭಾ ಕ್ಷೇತ್ರ: ಅಭ್ಯರ್ಥಿಗಳಲ್ಲಿ ಹೆಚ್ಚಿದ ತಳಮಳ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 14:56 IST
Last Updated 5 ಡಿಸೆಂಬರ್ 2019, 14:56 IST
ಕಾಗವಾಡ ಕ್ಷೇತ್ರದ ಉಗಾರದಲ್ಲಿ ತೆರೆದಿದ್ದ ಸಖಿ ಮತಗಟ್ಟೆಯಲ್ಲಿ ಮತ ಚಲಾಯಿಸಲು ಮಹಿಳೆಯರು ಸಾಲಿನಲ್ಲಿ ನಿಂತಿದ್ದರು
ಕಾಗವಾಡ ಕ್ಷೇತ್ರದ ಉಗಾರದಲ್ಲಿ ತೆರೆದಿದ್ದ ಸಖಿ ಮತಗಟ್ಟೆಯಲ್ಲಿ ಮತ ಚಲಾಯಿಸಲು ಮಹಿಳೆಯರು ಸಾಲಿನಲ್ಲಿ ನಿಂತಿದ್ದರು   

ಮೋಳೆ: ಕಾಗವಾಡ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ನಡೆದ ಮತದಾನ ಶಾಂತಿಯುತವಾಗಿತ್ತು. ಯಾವುದೇ ಅಹಿತಕರ ಘಟನೆ ನಡೆದ ವರದಿಯಾಗಿಲ್ಲ. ಬೆಳಿಗ್ಗೆಯಿಂದ ಸಂಜೆವರೆಗೂ ಮತದಾರರು ಉತ್ಸಾಹದಿಂದಲೇ ಮತ ಚಲಾಯಿಸಿದ್ದು, ಕೇತ್ರದಲ್ಲಿ ಶೇ 76.27ರಷ್ಟು ಮತದಾನವಾಗಿದೆ.

ಮತದಾರರು ತಮ್ಮ ಹಕ್ಕು ಚಲಾಯಿಸಿ ತಮ್ಮ ನಾಯಕನ ಆಯ್ಕೆಗೆ ಮುದ್ರೆಯೊತ್ತಿದ್ದಾರೆ. ಮೂರೂ ಪಕ್ಷದ ಅಭ್ಯರ್ಥಿಗಳಲ್ಲಿ ದುಗುಡ ಹೆಚ್ಚಿದ್ದರೂ, ಫಲತಾಂಶಕ್ಕಾಗಿ ಮತ ಎಣಿಕೆವರೆಗೂ ಕಾಯಲೇಬೇಕು.

ಉಗಾರ ಪಟ್ಟಣದ ಮತಗಟ್ಟೆಯಲ್ಲಿ ಕುಟುಂಬ ಸಮೇತವಾಗಿ ಬಂದು ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಸುದ್ದಿಗಾರರೊಂದಿಗೆ ಮಾತನಾಡಿ, ‘ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕ್ಷೇತ್ರದ ಮತದಾರರು ಮತ್ತೊಮ್ಮೆ ತಮ್ಮನ್ನು ಆಶೀರ್ವದಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಕಾಂಗ್ರೆಸ್‌ನಿಂದ ಆಯ್ಕೆಯಾಗಿ ರಾಜೀನಾಮೆ ನೀಡುವ ಮೂಲಕ ಅನರ್ಹಗೊಂಡಿರುವ ಶ್ರೀಮಂತ ಪಾಟೀಲ ಪಕ್ಷಕ್ಕೆ ಮತ್ತು ಕ್ಷೇತ್ರದ ಜನರಿಗೆ ಮೋಸ ಮಾಡಿದ್ದಾರೆ. ಹೀಗಾಗಿ, ಜನರು ಈ ಉಪ ಚುನಾವಣೆ ಮೂಲಕ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ತಾವು ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿ, ಕ್ಷೇತ್ರವನ್ನು ಮಾದರಿಯಾಗಿಸಲು ಸಂಕಲ್ಪ ಮಾಡಿರುವುದಾಗಿ’ ತಿಳಿಸಿದರು.

ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಕೆಂಪವಾಡ ಗ್ರಾಮದ ಕನ್ನಡ ಸರ್ಕಾರಿ ಶಾಲೆಯಲ್ಲಿ ಕುಟುಂಬ ಸಮೇತವಾಗಿ ಬಂದು ಮತ ಚಲಾಯಿಸಿದರು. ‘ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ. ಕ್ಷೇತ್ರದ ಅಭಿವೃದ್ಧಿಗೆ ಹಂಬಲಿಸಿ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದೇನೆ. ಜನರು ನನ್ನನ್ನು ಬೆಂಬಲಿಸಿದ್ದಾರೆ ಎನ್ನುವ ವಿಶ್ವಾಸವಿದೆ’ ಎಂದು ಹೇಳಿದರು.

ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತುಗಶೆಟ್ಟಿ ಮೋಳೆ ಗ್ರಾಮದಲ್ಲಿ ಮತ ಚಲಾಯಿಸಿದರು. ಇವರೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.