ಬೆಳಗಾವಿ: ‘ಸಂತ ಕನಕದಾಸರು ದಾಸ ಸಾಹಿತ್ಯದ ಮೂಲಕ ಸಮಾಜದಲ್ಲಿರುವ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಲು ಶ್ರಮಿಸಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ, ನೆಮ್ಮದಿಯಿಂದ ಜೀವನ ಸಾಗಿಸಬಹುದು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಮಾಜದಲ್ಲಿ ಸಮಾನತೆ ಸಾರಿದ ದಾರ್ಶನಿಕ ಕವಿಯಾದ ಕನಕದಾಸರು ಒಂದೇ ಸಮುದಾಯಕ್ಕೆ ಸೀಮಿತವಾಗಿಲ್ಲ’ ಎಂದರು.
ಆರ್ಪಿಡಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಎಚ್.ಬಿ.ಕೋಲಕಾರ ಉಪನ್ಯಾಸ ನೀಡಿದರು. ನಗರ ಪೊಲೀಸ್ ಉಪ ಆಯುಕ್ತೆ (ಅಪರಾಧ ಮತ್ತು ಸಂಚಾರ ವಿಭಾಗ) ಪಿ.ವಿ.ಸ್ನೇಹಾ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡದುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಯಲ್ಲಪ್ಪ ಕುರಬರ, ಅಶೋಕ ಸದಲಗಿ, ರೇಖಾ ದಳವಾಯಿ, ಎಸ್.ಎಲ್.ಅಕ್ಕಿಸಾಗರ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ, ಕನಕದಾಸ ವೃತ್ತದಿಂದ ಕುಮಾರ ಗಂಧರ್ವ ರಂಗಮಂದಿರದವರೆಗೆ ಸಾಗಿದ ಕನಕದಾಸರ ಭಾವಚಿತ್ರದ ಮೆರವಣಿಗೆಗೆ ಶಾಸಕ ಆಸೀಫ್ ಸೇಠ್ ಚಾಲನೆ ನೀಡಿದರು. ಇದರಲ್ಲಿ ಭಾಗವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಟ್ರ್ಯಾಕ್ಟರ್ ಚಲಾಯಿಸಿ ಗಮನಸೆಳೆದರು. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್ ಇದ್ದರು. ಜಾನಪದ ಕಲಾತಂಡಗಳ ಪ್ರದರ್ಶನ ಮನಸೆಳೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.