ಬೆಳಗಾವಿ: ‘ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ನೈಪುಣ್ಯತೆ ಹೊಂದಬೇಕು ಎಂದು ಹೇಳುವ ಮೂಲಕ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಕನ್ನಡಿಗರನ್ನು ಅವಮಾನಿಸಿದ್ದಾರೆ’ ಎಂದು ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ಭೀಮಾಶಂಕರ ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ನೇಮಕಾತಿ ಸೇರಿದಂತೆ ರೈಲು ಯೋಜನೆಗಳಲ್ಲಿ ಸ್ಥಳೀಯರ ಹಿತ ಕಾಪಾಡಬೇಕಾದ, ಅದರಲ್ಲೂ ಕನ್ನಡ ನೆಲದವರಾದ ಸಚಿವರೇ ಇಂತಹ ಹೇಳಿಕೆ ನೀಡಿರುವುದು ಅಕ್ಷಮ್ಯ’ ಎಂದು ಹೇಳಿದ್ದಾರೆ.
‘ಹಿಂದಿ ಭಾಷೆಯ ಪರ ವಕಾಲತ್ತು ವಹಿಸುವ ಮೂಲಕ ಕನ್ನಡಿಗರ ಉದ್ಯೋಗಗಳನ್ನು ಕಿತ್ತುಕೊಳ್ಳಲು ಅಂಗಡಿ ಹೊರಟಿದ್ದಾರೆ. ಇವರು ತಕ್ಷಣ ಕನ್ನಡಿಗರಲ್ಲಿ ಕ್ಷಮೆಯಾಚಿಸಬೇಕು. ರೈಲ್ವೆ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದ್ದಾರೆ.
‘ರೈಲ್ವೆ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಡಬೇಕೆಂದು ಕನ್ನಡಿಗರು ಬಯಸಿದ್ದರು. ಆದರೆ, ಅಂಗಡಿಯವರು ಹಿಂದಿ ಜನರ (ಹೈಕಮಾಂಡ್) ಓಲೈಕೆಗಾಗಿ ಕನ್ನಡಿಗರಿಗೆ ಹಿಂದಿ ಕಲಿಯಿರಿ ಎಂದು ಹೇಳುತ್ತಿದ್ದಾರೆ. ಈ ಮೂಲಕ ಅವರು ನಾಡ ದ್ರೋಹ ಎಸಗಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ಸ್ಥಳೀಯ ಜನಪ್ರತಿನಿಧಿಗಳ ಇಂತಹ ಉದಾರಿತನಗಳಿಂದಲೇ ಇಂದು ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಲಯ ಸೇರಿದಂತೆ ರಾಜ್ಯದ ಬಹುತೇಕ ರೈಲು ನಿಲ್ದಾಣಗಳಲ್ಲಿ ಉತ್ತರ ಭಾರತೀಯರೇ ತುಂಬಿಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.