ಬೆಳಗಾವಿಯಲ್ಲಿ ರಾಣಿ ಚನ್ನಮ್ಮನ ಪ್ರತಿಮೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಮಾಲಾರ್ಪಣೆ ಮಾಡಿದರು.
ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಬೆಳಗಾವಿ: ಇಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2,500 ಜನರಿಗೆ ‘ಕನ್ನಡ ದೀಕ್ಷೆ’ ನೀಡಲಾಯಿತು.
ನಗರದಲ್ಲಿ ಈ ಬಾರಿ ಮೈಸೂರು ದಸರಾ ಮಾದರಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ವಿವಿಧ ಕನ್ನಡ ಸಂಘಟನೆಗಳು ತಾಲೀಮು ಆರಂಭಿಸಿವೆ.
ಈ ಮಧ್ಯೆ, ಕರ್ನಾಟಕ ರಕ್ಷಣಾ ವೇದಿಕೆಯು ‘ಕನ್ನಡ ದೀಕ್ಷೆ’ ಕಾರ್ಯಕ್ರಮದ ಮೂಲಕ ರಾಜ್ಯೋತ್ಸವಕ್ಕೂ 20 ದಿನ ಮುಂಚೆಯೇ ಗಡಿಯಲ್ಲಿ ಕನ್ನಡ ಡಿಂಡಿಮ ಮೊಳಗಿಸಿತು. ಗಡಿ ಕನ್ನಡಿಗರಿಗೆ ಹುಮ್ಮಸ್ಸು ತುಂಬುವ ಕೆಲಸ ಮಾಡಿತು.
ರಾಣಿ ಚನ್ನಮ್ಮನ ವೃತ್ತದಿಂದ ಗಾಂಧಿ ಭವನದವರೆಗೆ ಭವ್ಯ ಮೆರವಣಿಗೆ ನಡೆಯಿತು.
‘ನಾವು ರಾಜ್ಯದ 31 ಜಿಲ್ಲೆಗಳಲ್ಲೂ ‘ಕನ್ನಡ ದೀಕ್ಷೆ’ ಕಾರ್ಯಕ್ರಮ ನಡೆಸಲಿದ್ದೇವೆ. ಇದಕ್ಕೆ ಬೆಳಗಾವಿಯಿಂದಲೇ ಚಾಲನೆ ಕೊಟ್ಟಿದ್ದು, 2,500 ಮಂದಿಗೆ ಕನ್ನಡ ದೀಕ್ಷೆ ಕೊಟ್ಟಿದ್ದೇವೆ. ಇಡೀ ರಾಜ್ಯದಾದ್ಯಂತ 50 ಸಾವಿರ ಜನರಿಗೆ ಕನ್ನಡ ದೀಕ್ಷೆ ಕೊಡಲು ಯೋಜಿಸಿದ್ದೇವೆ’ ಎಂದು ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು.
‘ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಕರಾಳ ದಿನ ಆಚರಿಸಲು ಎಂಇಎಸ್ಗೆ ಅನುಮತಿ ಕೊಡಬಾರದು. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಸರ್ಕಾರವೇ ಹೊಣೆ’ ಎಂದು ಎಚ್ಚರಿಕೆ ಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.