ಬೆಳಗಾವಿ: ‘ಪ್ರಸಕ್ತ ಮಹಾನಗರ ಪಾಲಿಕೆಯ ಚುನಾವಣೆ ಸಂದರ್ಭದಲ್ಲಿ ಭಾಷೆ ಹೆಸರಿನಲ್ಲಿ ಕಿಡಿ ಹೊತ್ತಿಸಿ ರಾಜಕೀಯ ಲಾಭ ಮಾಡಿಕೊಳ್ಳಲು ಯತ್ನಿಸುತ್ತಿರುವ ನಾಡದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಕನ್ನಡ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಆಗ್ರಹಿಸಿದರು.
‘ಸಾಮಾಜಿಕ ಜಾಲತಾಣದಲ್ಲಿ ಭಾಷೆಯ ಕಿಡಿ ಹೊತ್ತಿಸಲು ಯತ್ನಿಸುತ್ತಿರುವ ಮತ್ತು ಎಂ.ಇ.ಎಸ್. (ಮಹಾರಾಷ್ಟ್ರ ಏಕೀಕರಣ ಸಮಿತಿ) ಪರವಾಗಿರುವ ಮರಾಠಿ ಪತ್ರಿಕೆಯೊಂದರಲ್ಲಿ ಭಾಷೆಯ ಹೆಸರಿನಲ್ಲಿ ಮತದಾರರನ್ನು ಪ್ರಚೋದಿಸಲಾಗುತ್ತಿದೆ. ಜಿಲ್ಲಾಧಿಕಾರಿ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು’ ಎಂದು ಹೋರಾಟಗಾರರು ಚುನಾವಣಾ ಅಧಿಕಾರಿ ಸಾರಿಕಾ ಶೆಟ್ಟಿ ಅವರ ಮೂಲಕ ಒತ್ತಾಯಿಸಿದರು.
‘ಸಾಮಾಜಿಕ ಜಾಲತಾಣದ ಪೋಸ್ಟ್ಗಳ ಮೇಲೆ ನಿಗಾ ಇರಿಸಿ ಕ್ರಮ ವಹಿಸಲಾಗುವುದು’ ಎಂದು ಶೆಟ್ಟಿ ಭರವಸೆ ನೀಡಿದರು.
ಕನ್ನಡ ಹೋರಾಟಗಾರರಾದ ಅಶೋಕ ಚಂದರಗಿ, ಮಹಾದೇವ ತಳವಾರ, ದೀಪಕ ಗುಡಗನಟ್ಟಿ, ಶಿವಪ್ಪ ಶಮರಂತ, ಸಾಗರ ಬೋರಗಲ್ಲ, ಮೈನೋದ್ದೀನ ಮಕಾನದಾರ, ಸುಮನ್ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.