ADVERTISEMENT

ರಾಣಿ ಚನ್ನಮ್ಮ ವಿವಿ ನೂತನ ಕ್ಯಾಂಪಸ್‌ಗೆ ₹100 ಕೋಟಿ: ಅಶ್ವತ್ಥನಾರಾಯಣ

ಜಾಗ ಪರಿಶೀಲಿಸಿದ ಉನ್ನತ ಶಿಕ್ಷಣ ಸಚಿವ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 7:42 IST
Last Updated 24 ಅಕ್ಟೋಬರ್ 2020, 7:42 IST
ರಾಣಿ ಚನ್ನಮ್ಮ ವಿವಿ ನೂತನ ಕ್ಯಾಂಪಸ್‌ಗೆ ₹100 ಕೋಟಿ: ಅಶ್ವತ್ಥನಾರಾಯಣ
ರಾಣಿ ಚನ್ನಮ್ಮ ವಿವಿ ನೂತನ ಕ್ಯಾಂಪಸ್‌ಗೆ ₹100 ಕೋಟಿ: ಅಶ್ವತ್ಥನಾರಾಯಣ   

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಹಿರೇಬಾಗೇವಾಡಿಯಲ್ಲಿಯೇ ಸ್ಥಾಪಿಸಲು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ ₹100 ಕೋಟಿ ಒದಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ಬಳಿ ಮಂಜೂರು ಮಾಡಲಾಗಿರುವ ಜಮೀನನ್ನು ಶನಿವಾರ ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.

ಈಗಾಗಲೇ 127 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಇಲ್ಲಿ ಅಕಾಡೆಮಿಕ್ ಮತ್ತು ಆಡಳಿತ ಕೇಂದ್ರ ಎರಡೂ ಕಾರ್ಯ ನಿರ್ವಹಿಸಲಿವೆ. ಸ್ಥಳೀಯ ರೈತರು ಸ್ವ ಇಚ್ಛೆಯಿಂದ ಜಮೀನು ನೀಡಲು ಮುಂದಾದರೆ ಮಾತ್ರ ಖರೀದಿಸಲಾಗತ್ತದೆ. ಆದರೆ ಜಮೀನು ನೀಡುವಂತೆ ಯಾರನ್ನೂ ಒತ್ತಾಯಿಸುವುದಿಲ್ಲ ಎಂದರು.

ADVERTISEMENT

ವಿಶ್ವವಿದ್ಯಾಲಯದ ಪ್ರಗತಿಗೆ ಸ್ವಂತ ಕ್ಯಾಂಪಸ್ ನಿರ್ಮಿಸಬೇಕು ಎಂಬುದು ಅನೇಕ ವರ್ಷಗಳ ಬೇಡಿಕೆಯಾಗಿತ್ತು. ಆ ಪ್ರಕಾರ ಸ್ಥಳ ನಿಗದಿ ಮಾಡಲಾಗಿದೆ. ನಗರಕ್ಕೆ ಸಮೀಪ ಜಮೀನು ಸಿಗುವುದು ಕಷ್ಟ. ಸ್ಥಳ ನಿಗದಿಗೆ ಪ್ರತಿಷ್ಠೆ ಬೇಡ. ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು ಎಂದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ- ಪರ್ಯಾಯ ಸ್ಥಳದ ಸಾಧ್ಯತೆ

ವಿಶ್ವವಿದ್ಯಾಲಯದ ಸ್ಥಾಪನೆಗೆ ನಿಗದಿಪಡಿಸಿರುವ ಸ್ಥಳದಲ್ಲಿಯೇ ನಡೆಯುತ್ತಿರುವ ಬಹು ಗ್ರಾಮ ಕುಡಿಯುವ ನೀರು ಯೋಜನೆ ರದ್ದಾಗುವುದಿಲ್ಲ. ಪರ್ಯಾಯ ವ್ಯವಸ್ಥೆಯ ಬಗ್ಗೆ ಪರಿಶೀಲಿಸಲು ಅವಕಾಶಗಳು ಕೂಡ ತಿಳಿಸಿದರು.

ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಎಲ್ಲ ಜನಪ್ರತಿನಿಧಿಗಳ ಪ್ರಯತ್ನದ ಮೇರೆಗೆ ಈ‌ ಜಮೀನು ಮಂಜೂರು ಮಾಡಲಾಗಿದೆ. ವಿಶ್ವವಿದ್ಯಾಲಯದ ನೂತನ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಅದೇ ರೀತಿ ಕಿತ್ತೂರಿನಲ್ಲಿ ಕೂಡ ಇತರ ಅಗತ್ಯ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದು ಅವರು ಹೇಳಿದರು.

ಈ ಭಾಗದಲ್ಲಿ ಇನ್ನೂ ಹೆಚ್ಚಿನ ಶೈಕ್ಷಣಿಕ ಪ್ರಗತಿಗೆ ಕ್ರಮ‌ ಕೈಗೊಳ್ಳಲಾಗುವುದು. ಎಲ್ಲ ಬಗೆಯ ಶೈಕ್ಷಣಿಕ ಕೋರ್ಸ್ ಆರಂಭಿಸುವ ಮೂಲಕ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ ಮಾಡಲಾಗಿದೆ. ಪ್ರಸ್ತಾವಿತ ಜಮೀನಿನಲ್ಲಿ ಇರುವ ಮಲ್ಲಯ್ಯಜ್ಜನ ದೇವಸ್ಥಾನವನ್ನು ಖಂಡಿತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಚಿವರ ಜತೆ ಚರ್ಚೆ ನಡೆಸಿದ ಹಿರೇಬಾಗೇವಾಡಿ ಗ್ರಾಮಸ್ಥರು, ವಿಶ್ವವಿದ್ಯಾಲಯ ಸ್ಥಾಪನೆಗೆ ಅಗತ್ಯರುವ ಹೆಚ್ಚುವರಿ ಜಮೀನು ನೀಡಲು ಸಿದ್ಧವಾಗಿರುವುದಾಗಿ ತಿಳಿಸಿದರು.

ಸರ್ಕಾರ ಮಂಜೂರು ಮಾಡಿರುವ ಜಮೀನಿನ ಕುರಿತು ಸಚಿವರಿಗೆ ಮಾಹಿತಿ ನೀಡಿದ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ‘ಗುಡ್ಡದ ಮೇಲೆ ಸಮತಟ್ಟಾಗಿರುವ ಜಮೀನು ಇದೆ. ಹೆಚ್ಚುವರಿ ಜಮೀನು ನೀಡಲು ಗ್ರಾಮಸ್ಥರು ಒಪ್ಪಿಗೆ ನೀಡಿದ್ದಾರೆ’ಎಂದು ತಿಳಿಸಿದರು.

‘ಕಾಲೇಜು ಆರಂಭ-ಎಲ್ಲ ಸುರಕ್ಷತಾ ಕ್ರಮ’: ಕೋವಿಡ್ ಹಿನ್ನೆಲೆಯಲ್ಲಿ ಸ್ವ ಇಚ್ಛೆಯಿಂದ ಬರುವ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಿ‌ ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ. ಆನ್ ಲೈನ್ ಮತ್ತು ಆಫ್ ಲೈನ್ ಶಿಕ್ಷಣ ಮುಂದುವರಿಯಲಿದ್ದು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಎಲ್ಲ ಬಗೆಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ,ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ, ಕುಲಸಚಿವರಾದ ಪ್ರೊ. ಬಸವರಾಜ ಪದ್ಮಶಾಲಿ, ಪ್ರೊ.ಎಸ್.ಎಂ. ಹುರಕಡ್ಲಿ, ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ.ಆನಂದ ಹೊಸೂರ, ಎಚ್.ಎಸ್. ಶಿಗ್ಗಾಂವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.