ADVERTISEMENT

ಕಾಂಗ್ರೆಸ್ ಮತಗಳನ್ನು ಹಿಡಿದಿಟ್ಟುಕೊಳ್ಳುವುದೇ ಸವಾಲಾಗಿತ್ತು: ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2021, 11:36 IST
Last Updated 14 ಡಿಸೆಂಬರ್ 2021, 11:36 IST
ಲಕ್ಷ್ಮಿ ಹೆಬ್ಬಾಳಕರ (ಸಂಗ್ರಹ ಚಿತ್ರ)
ಲಕ್ಷ್ಮಿ ಹೆಬ್ಬಾಳಕರ (ಸಂಗ್ರಹ ಚಿತ್ರ)   

ಬೆಳಗಾವಿ: ‘ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವವೇ ಪಕ್ಷದ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲುವಿಗೆ ಕಾರಣ. ಕಾಂಗ್ರೆಸ್ ಮತಗಳನ್ನು ಹಿಡಿದಿಟ್ಟುಕೊಳ್ಳುವುದೇ ನಮಗೆ ಸವಾಲಾಗಿತ್ತು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಇಲ್ಲಿ ಮಾಧ್ಯಮದವರೊಂದಿಗೆ ಮಂಗಳವಾರ ಮಾತನಾಡಿದ ಅವರು, ಹಾಲಿ, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ತಾವೇ ಚುನಾವಣೆ ಸ್ಪರ್ಧಿಸಿದಂತೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದು ನನ್ನ ಕಿರಿಯ ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಗೆಲುವಿಗೆ ಕಾರಣವಾಗಿದೆ. ಅವರಿಗೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಪರಿಷತ್ ಚುನಾವಣೆಯಲ್ಲಿ ಯಾರು, ಯಾರನ್ನು ಸೋಲಿಸಲು ನಿಂತಿದ್ದರೋ ಗೊತ್ತಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಗೆಲ್ಲೋಕೆ ನಿಂತಿತ್ತು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೆಲಸ ಮಾಡಿದ್ದೇವೆ. ಅದರ ಫಲಿತಾಂಶ ಈಗ ಬಂದಿದೆ. ಬೇರೆ ಪಕ್ಷದ ಬಗ್ಗೆ ಮಾತನಾಡಲು ಹೋಗುವುದಿಲ್ಲ ಎಂದು ಹೇಳಿದರು.

ಸತೀಶ ಜಾರಕಿಹೊಳಿ ಅವರು ಸಹ ಸ್ವತಃ ತಾವೇ ಚುನಾವಣೆಯಲ್ಲಿ ನಿಂತಿದ್ದೇನೆ ಎನ್ನುವ ರೀತಿಯಲ್ಲಿ ಕೆಲಸ ಮಾಡಿದರು. ಚುನಾವಣೆ ಘೋಷಣೆ ಆದಾಗಿನಿಂದ ಜಿಲ್ಲೆಯಾದ್ಯಂತ ತೆರಳಿ ಅಭ್ಯರ್ಥಿ ಪರ ಪ್ರಚಾರ ನಡೆಸಿದರು, ಅವರ ಪರಿಶ್ರಮ ಫಲ ನೀಡಿದೆ ಎಂದರು.

ಇದಕ್ಕೂ ಮುನ್ನ ಅವರು ಸತೀಶ ಕಾಲಿಗೆ ನಮಸ್ಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.