
ಬೆಳಗಾವಿ: ‘ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಜತೆ ನಮ್ಮ ಸಂಬಂಧ ಉತ್ತಮವಾಗಿದೆ. ಅವರ ವಿರುದ್ಧ ಪಕ್ಷದ ವರಿಷ್ಠರಿಗೆ ನಾವು ಯಾವುದೇ ದೂರು ಕೊಟ್ಟಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಉದ್ಯಾನ ಕಾಶಿಯಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸುರ್ಜೇವಾಲಾ ಅವರ ವಿರುದ್ಧ ದೂರು ಕೊಟ್ಟಿರುವ ವಿಚಾರ ತಿಳಿದಿಲ್ಲ’ ಎಂದರು.
ಡಿ.ಕೆ.ಶಿವಕುಮಾರ್ ಮತ್ತು ತಮ್ಮ ಮಧ್ಯೆ ಆಂತರಿಕ ತಿಕ್ಕಾಟ ನಡೆದಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸತೀಶ, ‘ಇದೂ ನನಗೆ ಗೊತ್ತಿಲ್ಲ. ಎಲ್ಲಿ ತಿಕ್ಕಾಟ ನಡೆದಿದೆ ಎಂದು ನೀವೇ ತೋರಿಸಿ’ ಎಂದು ಹೇಳಿದರು.
‘ಅಂಬೇಡ್ಕರ್ ಅವರಿಗೆ ಗೌರವ ನೀಡದ ಕಾಂಗ್ರೆಸ್ನವರು, ಅಂಬೇಡ್ಕರ್ ಹೆಸರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದಾರೆ’ ಎಂಬ ಶಾಸಕ ಬಸನಗೌಡ ಪಾಟೀಲ ಆರೋಪಕ್ಕೆ ಉತ್ತರಿಸಿದ ಅವರು, ‘ಆಕ್ಷೇಪಾರ್ಹ ಹೇಳಿಕೆ ಮೂಲಕ ಕೇಂದ್ರ ಸಚಿವ ಅಮಿತ್ ಶಾ ಅವರು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಹಾಗಾಗಿ ಇದರ ಬಗ್ಗೆ ಮಾತನಾಡುವ ನೈತಿಕತೆ ಯತ್ನಾಳ ಅವರಿಗಿಲ್ಲ’ ಎಂದು ತಿರುಗೇಟು ಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.