ADVERTISEMENT

‘ಕಿಣಯೆ ಡ್ಯಾಂ ಜೂನ್‌ಗೆ ಸಿದ್ಧ’

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2021, 13:21 IST
Last Updated 13 ಫೆಬ್ರುವರಿ 2021, 13:21 IST
ಬೆಳಗಾವಿ ತಾಲ್ಲೂಕಿನ ಕಿಣಯೆ ಸಮೀಪ ಜಲಾಶಯ ನಿರ್ಮಾಣ ಕಾಮಗಾರಿಯನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಶನಿವಾರ ವೀಕ್ಷಿಸಿದರು
ಬೆಳಗಾವಿ ತಾಲ್ಲೂಕಿನ ಕಿಣಯೆ ಸಮೀಪ ಜಲಾಶಯ ನಿರ್ಮಾಣ ಕಾಮಗಾರಿಯನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಶನಿವಾರ ವೀಕ್ಷಿಸಿದರು   

ಬೆಳಗಾವಿ: ‘ತಾಲ್ಲೂಕಿನಲ್ಲಿ ನಿರ್ಮಾಣವಾಗುತ್ತಿರುವ ಕಿಣಯೆ ಡ್ಯಾಂ ಜೂನ್ ವೇಳೆಗೆ ಸಿದ್ಧಗೊಳ್ಳಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಲೋಕಾರ್ಪಣೆ ಮಾಡಿಸಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ಕಾಮಗಾರಿಯನ್ನು ಶನಿವಾರ ವೀಕ್ಷಿಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಅಣೆಕಟ್ಟು ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಬಹುತೇಕ ಕೆಲಸ ಮುಗಿಯುವ ಹಂತಕ್ಕೆ ಬಂದಿದೆ. ಲಾಕ್‌ಡೌನ್‌ದಿಂದಾಗಿ ವಿಳಂಬವಾಗಿದೆ. ಈ ಅಣೆಕಟ್ಟು 5.41 ಚದರ ಕಿ.ಮೀ. ಜಲಾನಯನ ಕ್ಷೇತ್ರ ಹೊಂದಿದೆ. ಇದು ಮಳೆ ನೀರನ್ನೇ ಅವಲಂಬಿಸಿದೆ. ಇಲ್ಲಿಂದ ಕಿಣಯೆ, ಬಹದ್ದೂರವಾಡಿ, ಸಂತಿಬಸ್ತವಾಡ, ವಾಘವಡೆ ಹಾಗೂ ರಣಕುಂಡೆ ಗ್ರಾಮಗಳ ಸುಮಾರು 1,200 ಹೆಕ್ಟೇರ್ ಪ್ರದೇಶ ನೀರಾವರಿಗೆ ಒಳಪಡಲಿವೆ. ಡ್ಯಾಂ ಪ್ರದೇಶದಲ್ಲಿ ಉದ್ಯಾನ ನಿರ್ಮಿಸಿ ಪ್ರವಾಸಿ ತಾಣ ಮಾಡಲಾಗುವುದು. ಗೋವಾ ಹಾಗೂ ಬೆಳಗಾವಿ ಸುತ್ತಮುತ್ತಲಿನ ಪ್ರವಾಸಿಗರನ್ನು ಆಕರ್ಷಿಸಲಾಗುವುದು’ ಎಂದರು.

ADVERTISEMENT

‘ಜಿಲ್ಲೆಯ ಅಲ್ಲಲ್ಲಿ ಸಣ್ಣ ಡ್ಯಾಂಗಳ ನಿರ್ಮಾಣಕ್ಕಾಗಿ ಜಾಗ ಗುರುತಿಸಲಾಗುತ್ತಿದೆ. ಸಣ್ಣ ಜಲಾಶಯಗಳ ನಿರ್ಮಾಣದಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಜನರಿಗೆ ಅನುಕೂಲವಾಗುತ್ತದೆ. ನೆರೆಯ ಜಿಲ್ಲೆಗಳಿಗೂ ನೀರು ಪೂರೈಸಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.

‘ಹಲಗಾ-ಮಚ್ಚೆ ಬೈಪಾಸ್ ನಿರ್ಮಾಣದಲ್ಲಿ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ರೈತರಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು. ಕಮಿಷನ್ ಪಡೆಯುತ್ತಿರುವ ಯಾರೇ ಇದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ನೀರಾವರಿ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.