ಬೆಳಗಾವಿ: ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆಯ ಕುರಿತು ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಯಿತು.
‘ಕೋರೆ ಅವರು ಆಸ್ಪತ್ರೆಯ 1700 ಹಾಸಿಗೆಗಳನ್ನು ಬಡಜನರಿಗೆ ಉಚಿತವಾಗಿ ಮೀಸಲಿರಿಸಿದ್ದಾರೆ. ಸಮಾಜದ ಹಾಗೂ ಕರ್ನಾಟಕದ ಆಸ್ತಿಯಾಗಿದ್ದಾರೆ. ಅ. 15ರಂದು ನಾವೆಲ್ಲರೂ ಒಟ್ಟಾಗಿ ಅವರ ಜನ್ಮ ದಿನವನ್ನು ಅದ್ಧೂರಿಯಾಗಿ ಆಚರಿಸೋಣ’ ಎಂದು ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಹೇಳಿದರು.
‘ಕೇಂದ್ರ ಶಿಕ್ಷಣ, ಕೌಶಲ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಖಾತೆ ಸಚಿವ ಧರ್ಮೇಂದ್ರ ಪ್ರಧಾನ ಅವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಶಾಸಕ ಆರ್.ವಿ.ದೇಶಪಾಂಡೆ, ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡನವೀಸ್, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ’ ಎಂದು ಹೇಳಿದರು.
ಶಾಸಕ ಅನಿಲ ಬೆನಕೆ ಮಾತನಾಡಿ, ‘ಡಾ.ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ನಾವೆಲ್ಲರೂ ಜೊತೆಯಾಗಿ ಆಚರಿಸುವುದೇ ಸೌಭಾಗ್ಯ’ ಎಂದರು.
ಸಂಸ್ಥೆಯ ಅಧ್ಯಕ್ಷ, ಶಾಸಕ ಮಹಾಂತೇಶ ಕೌಜಲಗಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮಾಜಿ ಶಾಸಕ ರಾಜು ಕಾಗೆ, ವಿಜಯ ಮೋರೆ, ವಕೀಲ ಎಂ.ಬಿ.ಜಿರಲಿ, ಶಾಸಕ ಡಿ.ಎಂ.ಐಹೊಳೆ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಮಾಜಿ ಶಾಸಕರಾದ ಜಗದೀಶ ಮೆಟಗುಡ್, ಮಾಜಿ ಸಂಸದರಾದ ಅಮರಸಿಂಹ ಪಾಟೀಲ, ಗೋಕಾಕದ ಅಶೋಕ ಪೂಜಾರಿ, ರಾಮಣ್ಣ ಹುಕ್ಕೇರಿ, ವಿವಿಧ ತಾಲ್ಲೂಕುಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
ಕೆಎಲ್ಇ ಸಂಸ್ಥೆಯ ಪದಾಧಿಕಾರಿಗಳು, ಜಿಲ್ಲೆಯ ಸಕ್ಕರೆ ಕಾರಖಾನೆಗಳ ನಿರ್ದೇಶಕ ಮಂಡಳಿಯ ಸದಸ್ಯರು, ಡಾ.ಪ್ರಭಾಕರ ಕೋರೆ ಸಹಕಾರಿ ಕ್ರೆಡಿಟ್ ಸೌಹಾರ್ದ ಸಂಸ್ಥೆಯ ಪದಾಧಿಕಾರಿಗಳು ಮೊದಲ್ಗೊಂಡು ಸುಮಾರು 250ಕ್ಕೂ ಹೆಚ್ಚು ಗಣ್ಯರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.