ಚಿಕ್ಕೋಡಿ (ಬೆಳಗಾವಿ ಜಿಲ್ಲೆ):ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಗುರುವಾರ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಹರಿದ ಕೃಷ್ಣಾ ಹಾಗೂ ಉಪನದಿಗಳ ನೀರಿನ ಮಟ್ಟ ಶುಕ್ರವಾರ ಒಂದು ಅಡಿ ಏರಿಕೆಯಾಗಿದೆ.
ಶುಕ್ರವಾರ ನಸುಕಿನ 4ರ ಹೊತ್ತಿಗೆ ಚಿಕ್ಕೋಡಿ ತಾಲ್ಲೂಕಿನ ನಾಲ್ಕು ಕಿರು ಸೇತುವೆಗಳು ಮುಳಗಡೆಯಾಗಿವೆ. ಯಡೂರ- ಕಲ್ಲೋಳ, ಮಾಂಜರಿ- ಬಾವನಸೌಂದತ್ತಿ, ಮಲಿಕವಾಡ- ದತ್ತವಾಡ, ಯಕ್ಸಂಬಾ- ದಾನವಾಡ ಸೇತುವೆಗಳ ಮೇಲೆ ನೀರು ಹರಿಯುತ್ತಿದೆ.
ಕೃಷ್ಣಾ ಹಾಗೂ ಉಪನದಿಗಳಾದ ವೇದಗಂಗಾ, ದೂಧಗಂಗಾ ನದಿಗಳಿಗೆ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆಯಾಗುತ್ತಿದೆ.
ನದಿ ನೀರು ಹೆಚ್ಚಳವಾದ ಹಿನ್ನೆಲೆಯಲ್ಲಿ ರೈತರು ತಮ್ಮ ಪಂಪ್ ಸೆಟ್ ಗಳನ್ನು ಮನೆಗಳಿಗೆ ಸ್ಥಳಾಂತರಿಸಬೇಕು ಎಂದು ತಾಲ್ಲೂಕು ಆಡಳಿತ ಸೂಚನೆ ನೀಡಿದೆ.
ಮುಂಜಾಗ್ರತಾ ಕ್ರಮವಾಗಿ ನದಿ ದಡದ ಗ್ರಾಮಗಳಲ್ಲಿ ಎನ್.ಡಿ.ಆರ್.ಎಫ್ ತಂಡಗಳನ್ನು ನಿಯೋಜಿಸಲಾಗಿದೆ.
ಮಹಾರಾಷ್ಟ್ರದಿಂದ ಬರುವ ನೀರಿನ ಪ್ರಮಾಣದ ಮೇಲೆ ನಿಗಾ ಇಡಲು ನೋಡಲ್ ಅಧಿಕಾರಿಗಳನ್ನೂ ನಿಯೋಜಿಸಲಾಗಿದೆ.
ಇಂದು ನದಿ ನೀರಿನ ಮಟ್ಟ:ಕೃಷ್ಣಾ ನದಿಯಲ್ಲಿ ಮಾಂಜರಿ ಸೇತುವೆ ಬಳಿ 529.31 ಮೀಟರ್ ಹರಿವು ಇದೆ. ಹಿಪ್ಪರಗಿ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ 520.70 ಮೀಟರಿನಷ್ಟು ನೀರು ಧುಮ್ಮಿಕ್ಕುತ್ತಿದೆ. ಇಲ್ಲಿ 524 ಮೀಟರ್ ತಲುಪಿದರೆ ಪ್ರವಾಹ ಪರಿಸ್ಥಿತಿ ಉಂಟಾಗಲಿದೆ.
ಉಪನದಿಗಳಾದ ವೇದಗಂಗಾ, ದೂಧಗಂಗಾ ಸಮಾಗಮವಾಗಿ ಸದಲಗಾ ಸೇತುವೆ ಬಳಿ 533.25 ಅಡಿ ಇದೆ. ಇಲ್ಲಿ 538 ಅಡಿ ತಲುಪುವುದು ಅಪಾಯದ ಮಟ್ಟ ಎಂದು ಗುರುತಿಸಲಾಗಿದೆ.
ಉಳಿದಂತೆ, ಜಿಲ್ಲೆಯ ಬೆಳಗಾವಿ, ಖಾನಾಪುರ, ಸವದತ್ತಿ ತಾಲ್ಲೂಕುಗಳಲ್ಲಿ ಸಾಧಾರಣ ಮಳೆ ಮುಂದುವರಿದಿದೆ.
ಪ್ರವಾಹ ಸ್ಥಿತಿ: ಸನ್ನದ್ಧರಾಗಲು ಕಾರಜೋಳ ಸೂಚನೆ
ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ಕೃಷ್ಣಾ ನದಿಯ ಒಳಹರಿವು ಹೆಚ್ಚಿದೆ. ಆಲಮಟ್ಟಿ ಜಲಾಶಯದ ಒಳಹರಿವು ಶುಕ್ರವಾರ 75,200 ಕ್ಯುಸೆಕ್ ಇದೆ. ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗುವ ಸಂಭವವಿದೆ ಎಂದು ವರದಿಗಳ ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲಾಡಳಿತ ಸಂಪೂರ್ಣವಾಗಿ ಸನ್ನದ್ಧ ಸ್ಥಿತಿಯಲ್ಲಿದ್ದು, ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಆದೇಶ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.