ADVERTISEMENT

ಸರ್ಕಾರಿ ಜಮೀನು ಸಾಗುವಳಿ: ಹಕ್ಕುಪತ್ರ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2018, 12:52 IST
Last Updated 18 ಡಿಸೆಂಬರ್ 2018, 12:52 IST
ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕುಲವಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು
ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕುಲವಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ಜಿಲ್ಲೆಯ ಕಿತ್ತೂರು ತಾಲ್ಲೂಕಿನ ವಿವಿಧೆಡೆ ಹಾಗೂ ಕುಲವಳ್ಳಿ ಕಂದಾಯ ಗ್ರಾಮ ವ್ಯಾಪ್ತಿಯಲ್ಲಿ ರೈತರು ಅನೇಕ ವರ್ಷಗಳಿಂದ ಸರ್ಕಾರಿ ಜಮೀನು ಸಾಗುವಳಿ ಮಾಡಿಕೊಂಡು ಬಂದಿರುವ ನಮಗೆ ಭೂಮಿಯ ಹಕ್ಕುಪತ್ರ ನೀಡಬೇಕು’ ಎಂದು ಆಗ್ರಹಿಸಿ ಸ್ಥಳೀಯರು ಪ‍್ರಾಂತ ರೈತ ಸಂಘದ ನೇತೃತ್ವದಲ್ಲಿ ಮಂಗಳವಾರ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.

‘ಕುಲವಳ್ಳಿ ಗ್ರಾಮದಲ್ಲಿ ಈ ಹಿಂದೆ ಇನಾಮ್ ಭೂಮಿ ಇತ್ತು. ಆದರೆ, 1953ರಲ್ಲಿ ಇನಾಮ್ ರದ್ದತಿಯ ಕಾನೂನಿನ ಪ್ರಕಾರ ಇದು ರದ್ದಾಗಿದೆ. ಉಳುವವನೇ ಭೂಮಿಯ ಒಡೆಯ ಎಂಬ ಕಾನೂನಿನ ಅಡಿಯಲ್ಲಿ ಭೂಸುಧಾರಣೆ ಕಾನೂನು ಜಾರಿಗೆ ಬಂದರೂ ಕೆಲವು ತೊಂದರೆಗಳಿಂದಾಗಿ, ಭೂಮಿಯ ಮಂಜೂರಾತಿಯಿಂದ 2ಸಾವಿರಕ್ಕೂ ಹೆಚ್ಚು ಮಂದಿ ವಂಚಿತರಾಗಿದ್ದೇವೆ’ ಎಂದು ತಿಳಿಸಿದರು.

‘ಹೋದ ವರ್ಷ ಹೋರಾಟದ ಫಲವಾಗಿ ಕುಲವಳ್ಳಿಗೆ ಭೇಟಿ ನೀಡಿದ್ದ ಹಿಂದಿನ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು, ಸಾಗುವಳಿದಾರರು ಅರ್ಜಿ ಸಲ್ಲಿಸಲು (ನಮೂನೆ 57) ಸಹಕರಿಸಿದ್ದರು. ಆದರೆ, ಪಹಣಿ ಪತ್ರಿಕೆಯಲ್ಲಿ ಬೇನಾಮಿ ಹೆಸರುಗಳು ದಾಖಲಾಗಿವೆ. ಇತ್ತ ಸರ್ಕಾರ ಗಮನಹರಿಸಬೇಕು. ಹಿಂದಿನಿಂದಲೂ ಸಾಗುವಳಿ ಮಾಡಿಕೊಂಡು ಬಂದಿರುವವರಿಗೆ ನೆರವಾಗಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಪ‍್ರಾಂತ ರೈತ ಸಂಘದ ಮುಖಂಡರಾದ ಎನ್.ಎಸ್. ನಾಯಕ, ನಾಗಪ್ಪ ಅಸಲನ್ನವರ, ಈರಪ್ಪ ಪಾಟೀಲ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.