ಬೆಳಗಾವಿ: ‘ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಲಿಂಗಾಯತ ಪ್ರತ್ಯೇಕ ಧರ್ಮದ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದರು. ಈಗ, ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರದಿಂದ ಪ್ರವರ್ಗ 2ಎ ಹಾಗೂ ಕೇಂದ್ರದಿಂದ ಒಬಿಸಿ ಮೀಸಲಾತಿಗಾಗಿ ಆಗ್ರಹಿಸಿ ಸತ್ಯಾಗ್ರಹ ನಡೆಸುವ ಮೂಲಕ ಸಮುದಾಯದವರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ’ ಎಂದು ಜನಸಾಮಾನ್ಯರ ಪಕ್ಷದ ಅಧ್ಯಕ್ಷ ಯಲ್ಲಪ್ಪ ಹೆಗಡೆ ಆರೋಪಿಸಿದರು.
‘ಸ್ವಾಮೀಜಿಯು ಕೆಲವು ರಾಜಕಾರಣಿಗಳ ಒತ್ತಡಕ್ಕೆ ಮಣಿದು ಈ ರೀತಿ ಮಾಡುತ್ತಿದ್ದಾರೆ. ಇದರಿಂದಾಗಿ ಧರ್ಮಕ್ಕಾಗಿ ನಡೆಸಲಾಗಿದ್ದ ಹೋರಾಟವು ತನ್ನ ಮೂಲ ಸ್ವರೂಪ ಕಳೆದುಕೊಳ್ಳುತ್ತದೆ. ಇದಕ್ಕೆ ಅವಕಾಶ ಕೊಡಬಾರದು. ನಾನು ಯಾವ ಹಕ್ಕೊತ್ತಾಯದ ಪರವಿದ್ದೇನೆ ಎನ್ನುವುದನ್ನು ಸ್ಪಷ್ಟಪಡಿಸಬೇಕು. ಭಕ್ತರಲ್ಲಿ ಉಂಟಾಗಿರುವ ಗೊಂದಲ ನಿವಾರಿಸಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
‘ಶಾಸಕ ಮುರುಗೇಶ ನಿರಾಣಿ ಅವರು ಮಂತ್ರಿ ಸ್ಥಾನ ದೊರೆಯಲೆಂದು ಸ್ವಾಮೀಜಿ ಅವರನ್ನು ಮೀಸಲಾತಿ ಹೋರಾಟದ ಹೆಸರಲ್ಲಿ ಬಳಸಿಕೊಳ್ಳುತ್ತಿದ್ದಾರೆ. ನಿರಾಣಿ ಸೇರಿದಂತೆ ಕೆಲವು ಮುಖಂಡರು ಸ್ವಾರ್ಥ ಸಾಧನೆಗೋಸ್ಕರ ಸ್ವಾಮೀಜಿ ಅವರ ದಾರಿ ತಪ್ಪಿಸುತ್ತಿದ್ದಾರೆ’ ಎಂದು ದೂರಿದರು.
‘ಸ್ವಾಮೀಜಿ ಅವರ ಹಕ್ಕೊತ್ತಾಯ ಪ್ರತ್ಯೇಕ ಧರ್ಮದ ಮಾನ್ಯತೆ ಪಡೆಯುವುದಾಗಿದ್ದರೆ ಆ ಹೋರಾಟವನ್ನು ತೀವ್ರಗೊಳಿಸಬೇಕು. ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಒತ್ತಾಯಿಸಿದರು.
‘ಸಮಾಜವು ರಾಜಕಾರಣಿಗಳ ದಾಳಕ್ಕೆ ಬಲಿಯಾಗಬಾರದು’ ಎಂದರು.
ಉಪಾಧ್ಯಕ್ಷ ಕೆ.ಎನ್. ಹೇಮಂತ್, ಪ್ರಧಾನ ಕಾರ್ಯದರ್ಶಿ ತುಕಾರಾಮ ಮ್ಯಾಗಿನಮನಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.