ಹಿರೇಬಾಗೇವಾಡಿ ಸಮೀಪದ ಕರಡಿಗುದ್ದಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಬಸವೇಶ್ವರ ದೇವಸ್ಥಾನದ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಿರೇಬಾಗೇವಾಡಿ: ಸಮೀಪದ ಕರಡಿಗುದ್ದಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ₹72 ಲಕ್ಷ ಅನುದಾನದಲ್ಲಿ ನಿರ್ಮಿಸಲಾಗಿದ್ದ ಬಸವೇಶ್ವರ ದೇವಸ್ಥಾನದ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ಭಾನುವಾರ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಅಧಿಕಾರ ಶಾಶ್ವತವಲ್ಲ, ಆದರೆ ಅಧಿಕಾರ ಇದ್ದಾಗ ಒಳ್ಳೆಯ ಕೆಲಸ ಮಾಡಬೇಕೆಂದು ಸಂಕಲ್ಪ ಮಾಡಿದ್ದೇನೆ. ಊರಿನ ಮಗಳಾಗಿ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಹೇಳಿದರು.
ಗ್ರಾಮದಲ್ಲಿನ ಸಂಭ್ರಮ, ಸಡಗರವನ್ನು ನೋಡಲು ಎರಡು ಕಣ್ಣು ಸಾಲದು. ಅಲಂಕಾರಿಕ ಶಿಲ್ಪಕಲೆಯೊಂದಿಗೆ ವಿನ್ಯಾಸಗೊಳಿಸಲಾದ ಈ ದೇವಸ್ಥಾನವು ಧಾರ್ಮಿಕ ನಂಬಿಕೆಗೆ ಮಾತ್ರವಲ್ಲ, ಸಾಂಸ್ಕೃತಿಕ ಸೌಂದರ್ಯಕ್ಕೂ ಮಾದರಿಯಾಗಿದೆ. ಭಕ್ತರ ಶ್ರದ್ಧೆ ಹಾಗೂ ದೇವರ ಆಶೀರ್ವಾದದಿಂದ ಈ ಪವಿತ್ರ ತಾಣ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ ಎಂದರು.
ಈ ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ₹1.25 ಕೋಟಿ ವೆಚ್ಚದಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗುತ್ತಿದೆ. ಪಶು ಆಸ್ಪತ್ರೆ ಮಾಡಲಾಗಿದ್ದು, ₹4 ಕೋಟಿ ವೆಚ್ಚದಲ್ಲಿ ಗ್ರಾಮದ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.
ಸಚಿವರನ್ನು ಭವ್ಯ ಮೆರವಣಿಗೆಯೊಂದಿಗೆ ಊರಲ್ಲಿ ಬರಮಾಡಿಕೊಳ್ಳಲಾಯಿತು. ಪ್ರತಿ ಮನೆ ಮುಂದೆ ರಂಗವಲ್ಲಿ ಹಾಕಿ, ಆರತಿ ಬೆಳಗಿ ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ಅರಳಿಕಟ್ಟಿ ತೋಂಟದಾರ್ಯ ಮಠದ ಶಿವಮೂರ್ತಿ ಸ್ವಾಮೀಜಿ ಮಾತನಾಡಿ, ಮುಂಬರುವ ದಿನಗಳಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಕರ್ನಾಟಕದ ಮೊದಲ ಮಹಿಳಾ ಮುಖ್ಯಮಂತ್ರಿ ಆಗಲಿ ಎಂದರು.
ಮುಖಂಡ ಶಂಕರಗೌಡ ಪಾಟೀಲ ಮಾತನಾಡಿದರು, ಹಾಲಪ್ಪ ನೇಸರಗಿ, ಅಶೋಕ ಮೂಕನವರ, ಚನ್ನಬಸಪ್ಪ ರಾಚನ್ನವರ, ಗ್ರಾಮ ಪಂಚಾಯತಿ ಅಧ್ಯಕ್ಷೆ ಪಾರ್ವತಿ ಅರಬಳ್ಳಿ, ಮೋಹನ ಬಡಿಗೇರ್, ಗಿರಿಜಾ ಪಾಟೀಲ, ಸಂಜಯ್ ಚಾಟೆ, ಕಾಳಪ್ಪ ಗಾಡಿವಡ್ಡರ್, ಸುರೇಶ ಪಡಗಣ್ಣವರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.