ಬೆಳಗಾವಿ: ‘ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರು ಕಾಂಗ್ರೆಸಿನ ಬಿ ಟೀಂ’ ಎಂಬ ಸಚಿವ ಮುರಗೇಶ ನಿರಾಣಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಕೆಪಿಸಿಸಿ ವಕ್ತಾರೆಯೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಒತ್ತಡಕ್ಕೆ ಮಣಿದು ಆರೋಪಿಸಿದ್ದಾರೆ’ ಎಂದು ಟೀಕಿಸಿದರು.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ 27 ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಮಾವೇಶ ಕಾಂಗ್ರೆಸ್ ಪ್ರಾಯೋಜಿತ ಎಂಬ ನಿರಾಣಿ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಇದು ಸಮಾಜದ ಸಮಾವೇಶ ಹಾಗೂ ಕೆಲಸವಾಗಿದೆ. ಯಾವುದೇ ಪಕ್ಷಕ್ಕೆ ಅನುಕೂಲ ಆಗಲೆಂದು ನಾವು ಹೋರಾಡುತ್ತಿಲ್ಲ’ ಎಂದು ತಿಳಿಸಿದರು.
‘ಹೆಚ್ಚಿನ ಮೀಸಲಾತಿ ದೊರೆತರೆ, ನಮ್ಮ ಯುವಕ-ಯುವತಿಯರಿಗೆ ಅನುಕೂಲ ಆಗುತ್ತದೆ. ಅದಕ್ಕಾಗಿ ನಾವು ಶ್ರಮಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ವರದಿ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಆದಷ್ಟು ಬೇಗ ವರದಿ ಪಡೆದು ಸಮಾಜಕ್ಕೆ ನೆರವಾಗುವ ಕೆಲಸವನ್ನು ಸಚಿವರಾದ ನಿರಾಣಿ ಹಾಗೂ ಸಿ.ಸಿ. ಪಾಟೀಲ ಮಾಡಬೇಕು’ ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.