
ಬೆಳಗಾವಿ: ಜಿಲ್ಲೆಯ ಕಾಗವಾಡ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಐನಾಪೂರ ಗ್ರಾಮದ ಸರ್ಕಾರಿ ಜಮೀನಿನಲ್ಲಿ 20 ಗುಂಟೆ ಒತ್ತುವರಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಇದೇ ಗ್ರಾಮದ ಅಡಿವೆಪ್ಪ ಬಿನ್ ಭೂತಾಳಿ ಅಡಿಸೇರಿ ಎಂಬುವರಿಗೆ ‘ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ’ 1 ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿದೆ.
ಐನಾಪೂರ ಗ್ರಾಮದ ಸರ್ವೇ ನಂಬರ್ 69/ಎ ನಲ್ಲಿರುವ 119.26 ಎಕರೆ ಸರ್ಕಾರಿ ಜಮೀನಿನಲ್ಲಿ 20 ಗುಂಟೆ ಜಮೀನನ್ನು ಅಡಿವೆಪ್ಪ (59) ಒತ್ತುವರಿ ಮಾಡಿದ್ದಾರೆ’ ಎಂದು ಆರೋಪಿಸಿ ಕಾಗವಾಡ ತಹಶೀಲ್ದಾರ್ ಆರೋಪಿಸಿ ದೂರು ನೀಡಿದ್ದರು.
ಈ ದೂರಿನ ವಿಚಾರಣೆ ನಡೆಸಿದ ‘ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ’ದ 2ನೇ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರಾದ ಪಾಟೀಲ ನಾಗಲಿಂಗನಗೌಡ ಮತ್ತು ಕೆ.ಎಚ್.ಅಶ್ವತ್ಥ ನಾರಾಯಣ ಗೌಡ ಈ ಕುರಿತಂತೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
‘ಆರೋಪಿತರು ದಂಡ ಪಾವತಿಸಲು ವಿಫಲವಾದಲ್ಲಿ 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಹೆಚ್ಚುವರಿಯಾಗಿ ಅನುಭವಿಸಬೇಕು. ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಮುಫತ್ತು ಗಾಯರಾಣ ಜಮೀನಲ್ಲಿ (ಸರ್ಕಾರಿ ಜಮೀನು) ಆರೋಪಿಗೆ ಮಂಜೂರಾಗಿರುವ 30x40 ಅಡಿ ಹೊರತುಪಡಿಸಿ ಉಳಿದ ಸರ್ಕಾರಿ ಜಮೀನನ್ನು ಕೂಡಲೇ ತೆರವುಗೊಳಿಸಬೇಕು. ಈ ಕುರಿತಂತೆ 60 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು’ ಎಂದು ಕಾಗವಾಡ ತಹಶೀಲ್ದಾರ್ಗೆ ನಿರ್ದೇಶಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.