ಬೆಳಗಾವಿ: ನೆರೆಯ ಮಹಾರಾಷ್ಟ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಸವದತ್ತಿಯ ರೇಣುಕಾ ಯಲ್ಲಮ್ಮ, ಜೋಗಳಭಾವಿ ಸತ್ತೆಮ್ಮ ಹಾಗೂ ಚಿಂಚಲಿ ಮಾಯಕ್ಕಾ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶವನ್ನು ಈ ತಿಂಗಳ ಅಂತ್ಯದವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.
ಇದೇ 8ರಿಂದ ದೇವಸ್ಥಾನಗಳಿಗೆ ತೆರಳಲು ಭಕ್ತರಿಗೆ ಅನುವು ಮಾಡಿಕೊಡುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೆ, ಜಿಲ್ಲೆಯ ಈ ಮೂರು ದೇವಸ್ಥಾನಗಳ ಭಕ್ತರು ನೆರೆಯ ಮಹಾರಾಷ್ಟ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಲ್ಲಿ ಅತಿ ಹೆಚ್ಚು ಕೋವಿಡ್–19 ಪ್ರಕರಣಗಳು ದಾಖಲಾಗಿದ್ದರಿಂದ ಸದ್ಯಕ್ಕೆ ಪ್ರವೇಶ ಮುಕ್ತಗೊಳಿಸುವುದು ಬೇಡವೆಂದು ಜಿಲ್ಲೆಯ ಜನಪ್ರತಿನಿಧಿಗಳು ಒತ್ತಾಯಿಸಿದ್ದರು. ಇದಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
‘ಈ ದೇವಸ್ಥಾನಗಳಿಗೆ ಜೂನ್ 30ರವರೆಗೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶವಿಲ್ಲ. ಪ್ರತಿದಿನದ ಧಾರ್ಮಿಕ ವಿಧಿವಿಧಾನಗಳನ್ನು ಆಡಳಿತ ಮಂಡಳಿಯವರು ಸುರಕ್ಷತಾ ಕ್ರಮಗಳನ್ನು ಅನುಸರಿಸಿ ನಿರ್ವಹಿಸಬೇಕು’ ಎಂದು ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.