ಬೆಳಗಾವಿ: ‘ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ತಿರುಕನ ಕನಸು ಕಾಣುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಮಾರುತಿ ಝಿರಲಿ ಟೀಕಿಸಿದರು.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಯಾವಾಗಲೂ ಪ್ರಚಾರದಲ್ಲಿರಬೇಕೆಂಬ ಆಸೆ ಹಾಗೂ ವಿರೋಧಪಕ್ಷದ ನಾಯಕನ ಕುರ್ಚಿ ಗಟ್ಟಿಯಾಗಿಟ್ಟುಕೊಳ್ಳುವ ಉದ್ದೇಶದಿಂದ ರಾಷ್ಟ್ರಭಕ್ತರಾದ ಆರ್ಎಸ್ಎಸ್ನವರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುತ್ತಿದ್ದಾರೆ’ ಎಂದು ದೂರಿದರು.
‘ಅವರಿಗೆ ಪ್ರಚಾರದ ಹುಚ್ಚಿದೆ. ಪ್ರಧಾನಿ ಬಗ್ಗೆ ಏಕವಚನದಲ್ಲಿ ಮಾತನಾಡುವ ಮೂಲಕ ಸಣ್ಣತನವನ್ನು ಪ್ರದರ್ಶನ ಮಾಡುತ್ತಿದ್ದಾರೆ. ಕೂಡಲೇ ಅವರು ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದರು.
‘ಕಾಂಗ್ರೆಸ್ ನಾಯಕರು ಮೋದಿ ವಿರುದ್ಧ ಮಾತನಾಡಿದ್ದರಿಂದಲೆ, ದೇಶದ ಜನರಿಗೆ ಆ ಪಕ್ಷದ ಬಗ್ಗೆ ತಿರಸ್ಕಾರದ ಭಾವನೆ ಬಂದಿದೆ. ಈ ಕಾರಣದಿಂದಾಗಿಯೇ ಸಿದ್ದರಾಮಯ್ಯ ಅವರನ್ನು ಮೈಸೂರು ಜನರು ತಿರಸ್ಕರಿಸಿ ಅಲ್ಲಿಂದ ಓಡಿಸಿದ್ದಾರೆ. ಉತ್ತರ ಕರ್ನಾಟಕದ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಆಯ್ಕೆಯಾಗಬೇಕಾದ ಸಂದರ್ಭ ಬಂತು. ಹೀಗಿದ್ದರೂ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಕನಸು ಕಾಣುವುದನ್ನು ಸಿದ್ದರಾಮಯ್ಯ ಬಿಟ್ಟಿಲ್ಲ’ ಎಂದು ವ್ಯಂಗ್ಯವಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.