ಬೆಳಗಾವಿ: ಇಲ್ಲಿ ಕಳೆದ 21 ವರ್ಷಗಳಿಂದ ಅದ್ಧೂರಿಯಾಗಿ ಆಚರಿಸಲಾಗುತ್ತಾ ಬಂದಿರುವ ಭಗವಾನ್ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವವನ್ನು ಈ ವರ್ಷ ಸರಳ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಶುಕ್ರವಾರ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೈನ ಸಮಾಜದ ಮುಖಂಡರ ಜೊತೆ ಚರ್ಚಿಸಿದ ಬಳಿಕ ಸಂಜೆ ಭರತೇಶ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ಸಮಸ್ತ ಜೈನ ಸಮಾಜದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಏ. 6ರಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವವನ್ನು ಪ್ರತಿ ವರ್ಷದಂತೆ ಆಚರಿಸಲು ಉದ್ದೇಶಿಸಲಾಗಿತ್ತು. ಆದರೆ, ಕೊರೊನಾ ವೈರಾಣು ಸೋಂಕು ಸೃಷ್ಟಿಸಿರುವ ಭೀತಿ ಹಿನ್ನೆಲೆಯಲ್ಲಿ ಸರಳವಾಗಿ ನಡೆಸಲಾಗುವುದು. ಅಂದು ನಗರ ಮತ್ತು ತಾಲ್ಲೂಕಿನಲ್ಲಿರುವ ಆಯಾ ಭಾಗದ ಜೈನ ಬಸದಿಗಳಲ್ಲಿ ಅಲ್ಲಿನವರು ವಿಶೇಷ ಪೂಜೆ ಸಲ್ಲಿಸಬೇಕು ಎಂದು ಸೂಚಿಸಲು ತೀರ್ಮಾನಿಸಲಾಯಿತು.
ಮುಖಂಡರಾದ ರಾಜೇಂದ್ರ ಜೈನ, ಶ್ರೀಪಾಲ ಖೇಮಲಾಪೂರೆ, ಹೀರಾಚಂದ ಕಲಮನಿ, ಕುಂತಿನಾಥ ಕಲಮನಿ, ಸನ್ಮತಿ ಕಸ್ತೂರಿ, ಅಭಯ ಅವಲಕ್ಕಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.