ಬೆಳಗಾವಿ: ‘ಉತ್ತಮ ಆರೋಗ್ಯ, ಪರಿಸರ ಹಾಗೂ ರೈತರ ಶ್ರೇಯಸ್ಸಿಗಾಗಿ ಸಿರಿಧಾನ್ಯಗಳು ಅವಶ್ಯವಾಗಿದ್ದು, ಈ ಬಗ್ಗೆ ಜಾಗೃತಿ ಮೂಡಿಸಲು ಜ. 25 ಹಾಗೂ 26ರಂದು ಇಲ್ಲಿನ ಶಿವಬಸವ ನಗರದ ಎಸ್ಜಿಬಿಐಟಿ ಕಾಲೇಜು ಆವರಣದಲ್ಲಿ ಸಾವಯವ, ಸಿರಿಧಾನ್ಯ ಮೇಳ ಮತ್ತು ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಪ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.
‘ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಕೃಷಿಕ ಸಮಾಜ, ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ, ಕೃಷಿ ತಂತ್ರಜ್ಞರ ಸಂಸ್ಥೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದೆ. 75ಕ್ಕೂ ಹೆಚ್ಚಿನ ಮಳಿಗೆಗಳು ಇರಲಿವೆ. ಪ್ರದರ್ಶನದೊಂದಿಗೆ ಮಾರಾಟಕ್ಕೂ ವ್ಯವಸ್ಥೆ ಇರುತ್ತದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘25ರಂದು ಬೆಳಿಗ್ಗೆ 10ಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಉದ್ಘಾಟಿಸುವರು. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮುಖ್ಯಅತಿಥಿಗಳಾಗಿ ಭಾಗವಹಿಸುವರು. ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ಹೇಳಿದರು.
‘ಸಸಿಗಳು, ಜೇನು ಕೃಷಿ, ಹಣ್ಣುಗಳಿಂದ ಅಲಂಕೃತ ಕಲಾಕೃತಿಗಳು, ಉತ್ತಮ ತಳಿಯ ಎತ್ತು ಹಾಗೂ ಆಡುಗಳ ಪ್ರದರ್ಶನ ಏರ್ಪಡಿಸಲಾಗಿದೆ. ತಜ್ಞರು, ಪ್ರಗತಿಪರ ರೈತರಿಂದ ಉಪನ್ಯಾಸ ಹಾಗೂ ಸಂವಾದ ಇರುತ್ತದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದರು.
‘ಸಾಂಪ್ರದಾಯಿಕ, ಆರೋಗ್ಯಕರ ಆಹಾರಗಳ ಪುನರ್ ಅನ್ವೇಷಣೆಗಾಗಿ ಜ. 24ರಂದು ಬೆಳಿಗ್ಗೆ 6.30ಕ್ಕೆ ರಾಣಿ ಚನ್ನಮ್ಮ ವೃತ್ತದಿಂದ ಎಸ್ಜಿಬಿಐಟಿವರೆಗೆ ಸಿರಿಧಾನ್ಯ ನಡಿಗೆ ಆಯೋಜಿಸಲಾಗಿದ್ದು, ಸಾರ್ವಜನಿಕರು ಭಾಗವಹಿಸಬೇಕು’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಲಾನಿ ಮೊಕಾಶಿ ತಿಳಿಸಿದರು.
ಕೃಷಿ ಇಲಾಖೆ ಉಪ ನಿರ್ದೇಶಕ ಡಾ.ಎಚ್.ಡಿ. ಕೋಳೆಕರ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಹಕಾಟೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.