ಬೆಳಗಾವಿ: ‘ಜಿಲ್ಲೆಯ 321 ಹಳ್ಳಿಗಳಲ್ಲಿ 25ಕ್ಕೂ ಹೆಚ್ಚು ಕೋವಿಡ್–19 ಪ್ರಕರಣಗಳು ದೃಢಪಟ್ಟಿರುವುದನ್ನು ಗುರುತಿಸಲಾಗಿದೆ. ಗ್ರಾಮೀಣ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಸಮೀಪದ ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯಬೇಕು’ ಎಂದು ಡಿಎಚ್ಒ ಡಾ.ಎಸ್.ವಿ. ಮುನ್ಯಾಳ ತಿಳಿಸಿದರು.
ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ 4 ದಿನಗಳಿಂದ ಪಾಸಿಟಿವಿಟಿ ದರ ಹೆಚ್ಚಿದೆ. ಗ್ರಾಮೀಣ ಪ್ರದೇಶಗಳಲ್ಲೂ ಆ ಪ್ರಮಾಣ ಏರಿಕೆಯಾಗಿದೆ. ಗೋಕಾಕ, ಅಥಣಿ, ಚಿಕ್ಕೋಡಿ ಭಾಗದಲ್ಲಿ ಹೆಚ್ಚುತ್ತಿದೆ. ರೋಗ ಲಕ್ಷಣಗಳಿಲ್ಲದ ಸೋಂಕಿತರು ಹೆಚ್ಚುತ್ತಿದ್ದಾರೆ. ಒಳ್ಳೆಯ ವಾತಾವರಣದಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ. ಜನರು ಆತಂಕಕ್ಕೆ ಒಳಗಾಗದೆ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಕೋವಿಡ್ ಕೇರ್ ಕೇಂದ್ರಗಳಿಗೆ ಸೇರಿ ಚಿಕಿತ್ಸಾ ಸೌಲಭ್ಯ ಪಡೆದುಕೊಳ್ಳಬೇಕು’ ಎಂದು ಕೋರಿದರು.
‘ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇದೆ. ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಕೇಂದ್ರ ಸರ್ಕಾರದಿಂದ 54 ವೆಂಟಿಲೇಟರ್ ಬಂದಿದ್ದವು. ಈಗ ಬಿಮ್ಸ್ನಲ್ಲಿ ಐಸಿಯು ವಿಭಾಗದಲ್ಲಿ32 ವೆಂಟಿಲೇಟರ್ಗಳನ್ನು ಬಳಸಲಾಗುತ್ತಿದೆ’ ಎಂದರು.
‘ಜಿಲ್ಲೆಯ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಮೊದಲನೇ ಡೋಸ್ ಲಸಿಕೆ ನೀಡುತ್ತಿಲ್ಲ. 2ನೇ ಡೋಸ್ ಮಾತ್ರ ನೀಡುತ್ತಿದ್ದೇವೆ. ಲಸಿಕೆ ಬಂದ ಮೇಲೆ 18ರಿಂದ 44 ವರ್ಷದವರಿಗೆ ಸಿಗುತ್ತದೆ’ ಎಂದು ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.