ಬೆಳಗಾವಿ: ತಮಗೆ ಪುನರ್ವಸತಿ, ಪರ್ಯಾಯ ಉದ್ಯೋಗ ಹಾಗೂ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಗಣಿ ಕಾರ್ಮಿಕರು ಟಿಯುಸಿಐ ಸಂಘಟನೆ ನೇತೃತ್ವದಲ್ಲಿ ಶುಕ್ರವಾರ ತಾಲ್ಲೂಕಿನ ಸುವರ್ಣ ವಿಧಾನಸೌಧ ಬಳಿಯ ಕೊಂಡಸಕೊಪ್ಪದಲ್ಲಿ ಪ್ರತಿಭಟನೆ ನಡೆಸಿದರು.
‘ಬಳ್ಳಾರಿ, ಸಂಡೂರು, ಹೊಸಪೇಟೆ ಮೊದಲಾದ ಕಡೆಗಳಲ್ಲಿ ಎ, ಬಿ, ಸಿ ದರ್ಜೆಗಳ 52ಕ್ಕೂ ಹೆಚ್ಚು ಗಣಿಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಅವುಗಳನ್ನು ಸರ್ಕಾರ ಬಂದ್ ಮಾಡಿಸಿದೆ. ಈಗ ಬೆರಳೆಣಿಕೆಯಷ್ಟು ಮಾತ್ರವೇ (ಎ ಹಾಗೂ ಬಿ ದರ್ಜೆಯ) ಗಣಿಗಳಿಗೆ ಅವಕಾಶವಿದೆ. ಈ ಗಣಿಗಾರಿಕೆ ಪ್ರದೇಶಗಳಲ್ಲಿ 25ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಸರ್ಕಾರದ ನೀತಿಯಿಂದಾಗಿ ಉದ್ಯೋಗ ಕಳೆದುಕೊಳ್ಳುವಂತಾಗಿದೆ. ಇದರಿಂದ ನಮ್ಮ ಕುಟುಂಬಗಳು ಬೀದಿಗೆ ಬಿದ್ದಿವೆ. ಗಣಿಗಾರಿಕೆ ಹೊರತುಪಡಿಸಿ ಬೇರೆ ಕೆಲಸಗಳು ನಮಗೆ ಗೊತ್ತಿಲ್ಲದೇ ಇರುವುದರಿಂದ ಅತಂತ್ರಗೊಂಡಿದ್ದೇವೆ’ ಎಂದು ತಿಳಿಸಿದರು.
‘ಹೀಗಾಗಿ, ಸರ್ಕಾರ ನಮಗೆ ನೆರವಾಗಬೇಕು. ಪುನರ್ವಸತಿ ಕಲ್ಪಿಸಬೇಕು. ಪರ್ಯಾಯ ಉದ್ಯೋಗ ಕಂಡುಕೊಳ್ಳಲು ಸಹಕರಿಸಬೇಕು’ ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.