ಬೆಳಗಾವಿ: ‘ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿಯ ಪರಮಾಧಿಕಾರ. ಈ ವಿಷಯದಲ್ಲಿ ನಾನು ಯಾರ ಪರವಾಗಿಯೂ ವಕಾಲತ್ತು ವಹಿಸುವುದಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ದೊಡ್ಡ ಇಲಾಖೆಯ ಹೊಣೆಯನ್ನು ನನಗೆ ನೀಡಿದ್ದಾರೆ. ಅದರ ಬಗ್ಗೆ ಗಮನಹರಿಸುತ್ತೇನೆ. ಯಾರನ್ನೂ ಮಂತ್ರಿ ಮಾಡುವ ಜವಾಬ್ದಾರಿ ತೆಗೆದುಕೊಳ್ಳುವುದಿಲ್ಲ. ಉಮೇಶ ಕತ್ತಿ ಹಿರಿಯ ಶಾಸಕರು. ಅವರು ಸಚಿವರಾಗಬೇಕೆಂಬ ಒತ್ತಾಯ ಮೊದಲಿನಿಂದಲೂ ಇದೆ’ ಎಂದರು.
ಬೆಂಗಳೂರಿನ ಮನೆಯಲ್ಲಿ ಕೆಲವು ಶಾಸಕರ ಸಭೆ ನಡೆಸಿದ ಕುರಿತು ಪ್ರತಿಕ್ರಿಯಿಸಿದ ಅವರು, ‘ನನ್ನ ಮೇಲೆ ಬಿಜೆಪಿ ಶಾಸಕರಿಗೆ ಅಪಾರವಾದ ಗೌರವವಿದೆ. ಈ ಆಧಾರದ ಮೇಲೆ ಅನೇಕ ಶಾಸಕರು ಸೇರಿ ಊಟ ಮಾಡಿದ್ದೇವೆ. ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಇಲಾಖೆಯ ಕೆಲವು ಕಾಮಗಾರಿಗಳ ಬಗ್ಗೆ ಚರ್ಚಿಸಲು ಬಂದಿದ್ದರು. ನನ್ನ ಇತಿಮಿತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ. ನಾವೆಲ್ಲರೂ ಒಂದೇ ಪಕ್ಷದಲ್ಲಿದ್ದೇವೆ. ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ’ ಎಂದು ತಿಳಿಸಿದರು.
‘ಉಪ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಮಾಡಿಕೊಳ್ಳಲಾಗಿದೆ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ, ‘ಇವಿಎಂನಲ್ಲಿ ದೋಷವಿದೆ ಎನ್ನುವುದಾದರೆ ಕಾಂಗ್ರೆಸ್ನಲ್ಲಿದ್ದಾಗ ನಾನೂ ಸೋಲುತ್ತಿದ್ದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.