ಬೆಳಗಾವಿ: ‘ಗೋವುಗಳ ರಕ್ಷಣೆ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಈ ಕಾರಣದಿಂದಾಗಿ, ಹಸು ಮೊದಲಾದ ಜಾನುವಾರು ಚಿಕಿತ್ಸೆಗಾಗಿ ಪ್ರತಿ ಜಿಲ್ಲೆಗೆ ಆಂಬುಲೆನ್ಸ್ ಒದಗಿಸಲಾಗಿದೆ. ಚಿಕಿತ್ಸೆ ನೀಡಲು ನಿರ್ಲಕ್ಷಿಸಿದರೆ ಸಂಬಂಧಿಸಿದ ಪಶು ವೈದ್ಯರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪಶುಸಂಗೋಪನಾ ಸಚಿವ ಪ್ರಭು ಚವಾಣ್ ಎಚ್ಚರಿಕೆ ನೀಡಿದರು.
ಇಲ್ಲಿನ ಪಶುಪಾಲನಾ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಕೊರೊನಾ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಯು ಹಸು ಎಮ್ಮೆ, ಆಡು, ಕುರಿಗಳ ರಕ್ಷಣೆಗೆ ಹೆಚ್ಚು ಒತ್ತು ನೀಡುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಶೀಘ್ರವೇ ಇಲಾಖೆಯಲ್ಲಿ 18ಸಾವಿರ ಹುದ್ದೆಗಳ ನೇಮಕಕ್ಕೆ ಶಿಫಾರಸು ಮಾಡಲಾಗುವುದು. ಅಥಣಿ ತಾಲ್ಲೂಕಿನಲ್ಲಿ ಪಶು ವೈದ್ಯಕೀಯ ಕಾಲೇಜು ಆರಂಭಕ್ಕೆ ಕ್ರಮ ವಹಿಸಲಾಗುವುದು’ ಎಂದರು.
‘ತಾಲೂಕು ಮಟ್ಟದಲ್ಲಿ ಪ್ರತಿಯೊಬ್ಬ ಪಶು ಅಧಿಕಾರಿಯೂ ರೈತರ ಜೊತೆ ಸಂಪರ್ಕದಲ್ಲಿರಬೇಕು. ಶಿಬಿರಗಳನ್ನು ನಡೆಸುವ ಮೂಲಕ ಜಾನುವಾರು ಆರೋಗ್ಯ ತಪಾಸಣೆ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.
ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕ ಅಶೋಕ ಕೊಳ್ಳ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ವಕ್ಫ್ ಅಧಿಕಾರಿಗಳು ಭಾಗವಹಿಸಿದ್ದರು.
ಇದಕ್ಕೂ ಮುನ್ನ, ಮಹಾಂತೇಶ ನಗರದಲ್ಲಿ ನಿರ್ಮಿಸಲಾಗುತ್ತಿರುವ ಇಲಾಖೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಕಾಮಗಾರಿಯನ್ನು ಸಚಿವರು ಪರಿಶೀಲಿಸಿದರು.
‘₹ 1.25 ಕೋಟಿ ವೆಚ್ಚದಲ್ಲಿ ಕಟ್ಟಡ ಹಾಗೂ ಪಶು ವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ ನಿರ್ಮಿಸಲಾಗುತ್ತಿದೆ. ಕಾಮಗಾರಿಯಲ್ಲಿ ಲೋಪ ಆಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
***
‘ನನ್ನನ್ನು ಸಂಪುಟದಿಂದ ಬಿಡುವುದಿಲ್ಲ’
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಬಿಜೆಪಿ ನಿಷ್ಠಾವಂತ ಕಾರ್ಯಕರ್ತನಾಗಿ 30 ವರ್ಷಗಳಿಂದ ದುಡಿಯುತ್ತಾ ಬಂದಿದ್ದೇನೆ. ಹೀಗಾಗಿ ನನ್ನನ್ನು ಯಾವುದೇ ಕಾರಣಕ್ಕೂ ಸಚಿವ ಸಂಪುಟದಿಂದ ಕೈ ಬಿಡುವುದಿಲ್ಲ’ ಎಂದು ಸಚಿವ ಪ್ರಭು ಚವಾಣ್ ವಿಶ್ವಾಸ ವ್ಯಕ್ತಪಡಿಸಿದರು.
‘ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಸ್ವತಃ ಮುಖ್ಯಮಂತ್ರಿಯೇ ಹೇಳಿದ್ದಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.