ಬೆಳಗಾವಿ: ‘ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಒಂದು ವರ್ಷದವರೆಗೆ ಆಸ್ತಿ ತೆರಿಗೆ ಪರಿಷ್ಕರಿಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.
ಇಲ್ಲಿನ ಪ್ರವಾಸಿಮಂದಿರದಲ್ಲಿ ಸೋಮವಾರ ತಮ್ಮನ್ನು ಭೇಟಿಯಾದ ನಗರಪಾಲಿಕೆ ಮಾಜಿ ಸದಸ್ಯರ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
‘ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಉಂಟಾಗಿದೆ. ಹೀಗಾಗಿ, ಪಾಲಿಕೆ ವ್ಯಪ್ತಿಯಲ್ಲಿ ತೆರಿಗೆ ಹೆಚ್ಚಿಸುವುದಿಲ್ಲ. ಈಗ ಇರುವಷ್ಟನ್ನೇ ಪಡೆಯಬೇಕು ಎಂದು ತಿಳಿಸಲಾಗಿದೆ’ ಎಂದರು.
ಸೇವಾ ಶುಲ್ಕ ವಿನಾಯಿತಿ
‘ಕೋವಿಡ್ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ನಾಗರಿಕರು ಘನ ತ್ಯಾಜ್ಯ ನಿರ್ವಹಣೆ ಸೇವಾ ಶುಲ್ಕ ಭರಿಸುವುದಕ್ಕೆ ವಿನಾಯಿತಿ ನೀಡಲು ಮಹಾನಗರಪಾಲಿಕೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಅನುಮೋದನೆ ನೀಡಿದ್ದಾರೆ’ ಎಂದು ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ತಿಳಿಸಿದ್ದಾರೆ.
‘ಈಗಾಗಲೇ ಯಾರಾದಾರೂ ಸೇವಾ ಶುಲ್ಕ ಪಾವತಿಸಿದ್ದಲ್ಲಿ ಮುಂದಿನ ವರ್ಷದಲ್ಲಿ ಅದನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಆಡಳಿತಾಧಿಕಾರಿ ಅನುಮೋದಿಸಿದ್ದಾರೆ. ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿದೆ ಹಾಗೂ ಲಾಕ್ಡೌನ್ ಜಾರಿಯಿಂದ ಸಾರ್ವಜನಿಕರಿಗೆ ಸೇವಾ ಶುಲ್ಕ ಭರಿಸಲು ತೊಂದರೆ ಆಗುತ್ತಿದೆ ಎನ್ನುವುದನ್ನು ಮನಗಂಡು ಜಿಲ್ಲಾ ಉಸ್ತುವಾರಿ ಸಚಿವರು, ರೈಲ್ವೆ ಖಾತೆ ರಾಜ್ಯ ಸಚಿವರ ನಿರ್ದೇಶನಂತೆ ಶಾಸಕರು ಹಾಗೂ ಜನಪ್ರತಿನಿಧಿಗಳ ಕೋರಿಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.