ಬೆಳಗಾವಿ: ‘ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ನಡೆಸುವುದು ಸೂಕ್ತ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈ ವಯಸ್ಸಿನ ವಿದ್ಯಾರ್ಥಿಗಳಿಗೆ ತಿಳಿವಳಿಕೆ ಇರುವುದರಿಂದ ಸಮಸ್ಯೆ ಉದ್ಭವಿಸುವುದಿಲ್ಲ. ಕೋವಿಡ್–19 ಸಂಕಷ್ಟದ ಸಮಯವಾದ್ದರಿಂದಾಗಿ ಪರೀಕ್ಷೆ ನಡೆಸುವ ಪೂರ್ವದಲ್ಲಿ ಶಿಕ್ಷಣ ಇಲಾಖೆಯು ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಶಿಕ್ಷಕರು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಸೋಂಕು ತಗುಲದಂತೆ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.
‘ರಾಜ್ಯದಲ್ಲಿ ಅಪೌಷ್ಟಿಕತೆ ಸಮಸ್ಯೆ ಎದುರಿಸುತ್ತಿರುವ ಮಕ್ಕಳಿಗೆ ಅವರ ಮನೆಗೇ ಪೌಷ್ಟಿಕ ಆಹಾರ ಪೂರೈಸಲು ಕ್ರಮ ವಹಿಸಲಾಗಿದೆ. ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ರಾಜ್ಯದಲ್ಲಿ 14.95 ಲಕ್ಷ ಮಕ್ಕಳಿದ್ದಾರೆ. ಅದರಲ್ಲಿ 7,751 ಮಕ್ಕಳು ತೀವ್ರ ಅಪೌಷ್ಟಿಕತೆ, 4ಲಕ್ಷಕ್ಕೂ ಅಧಿಕ ಮಕ್ಕಳು ಸಾಧಾರಣ ಪೌಷ್ಟಿಕ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ವಿವರ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.