ಬೆಳಗಾವಿ: ‘ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಸೇವೆಯಲ್ಲಿ ಲೋಪವಾಗದಂತೆ ನೋಡಿಕೊಳ್ಳಬೇಕು’ ಎಂದು ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಅಧಿಕಾರಿಗಳು ಹಾಗೂ ಸೇವಾ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದರು.
‘ಕೆಲವು ದಿನಗಳ ಹಿಂದೆ ಬಂದಾಗ ಹಲವು ಅವ್ಯವಸ್ಥೆಗಳಿದ್ದವು. ಅವುಗಳನ್ನು ಸರಿಪಡಿಸುವಂತೆ ನಿರ್ದೇಶನ ನೀಡಿದ್ದೆ. ಹೆರಿಗೆ ವಾರ್ಡ್ನಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು, ಬಿಸಿ ನೀರು ಕಲ್ಪಿಸಬೇಕು, ಶೌಚಾಲಯಗಳಲ್ಲಿ ಸ್ವಚ್ಛತೆಗೆ ಕ್ರಮ ವಹಿಸಬೇಕು, ಔಷಧಿಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು, ನರ್ಸ್ಗಳು ಸೌಜನ್ಯದಿಂದ ವರ್ತಿಸಬೇಕು, ವೈದ್ಯರು ಸಕಾಲಕ್ಕೆ ಲಭ್ಯವಿರಬೇಕು ಎಂದು ಸೂಚಿಸಿದ್ದೆ. ಈಗ ಶೇ 60ರಷ್ಟು ಸಮಸ್ಯೆಗಳು ಬಗೆಹರಿದಿವೆ’ ಎಂದು ತಿಳಿಸಿದರು.
‘ಮತ್ತಷ್ಟು ಸುಧಾರಣೆಗೆ ಕ್ರಮ ವಹಿಸಬೇಕು’ ಎಂದು ಸೂಚಿಸಿದರು.
‘ಆಸ್ಪತ್ರೆಯ ಸುಧಾರಣೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಸಮಾಜ ಸೇವಕರು, ಎನ್ಜಿಒಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ರವಿವಾರ ಪೇಟೆ ವ್ಯಾಪಾರಿಗಳ ಸಂಘ, ಕಲರ್ಸ್ ಅಂಡ್ ಪೇಂಟ್ಸ್ ಸಂಘ, ಜಿತೊ, ಕ್ರೆಡಾಯ್, ಜೈನ್ ಒಕ್ಕೂಟ, ಬಿಲ್ಡರ್ಗಳ ಸಂಘ, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಸಣ್ಣ ಕೈಗಾರಿಕೆಗಳ ಸಂಘ, ಗುತ್ತಿಗೆದಾರರು, ಮಾರವಾಡಿ ಯುವ ಮಂಚ್ ಸದಸ್ಯರು ಮೊದಲಾದವರೊಂದಿಗೆ ಚರ್ಚಿಸಿದ್ದೇನೆ. ಆಸ್ಪತ್ರೆಯ ಅಭಿವೃದ್ಧಿಗೆ ಸಹಕರಿಸಲು ಅವರೆಲ್ಲರೂ ಸಮ್ಮತಿಸಿದ್ದಾರೆ’ ಎಂದು ಹೇಳಿದರು.
ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.