ADVERTISEMENT

ಬಿಜೆಪಿ ಸರ್ಕಾರದಲ್ಲಿ 'ಹಲಾಲ್'ಗೆ ಮೊದಲ ಬಲಿ ಈಶ್ವರಪ್ಪ: ಸತೀಶ ಜಾರಕಿಹೊಳಿ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 12:49 IST
Last Updated 16 ಏಪ್ರಿಲ್ 2022, 12:49 IST
ಸತೀಶ ಜಾರಕಿಹೊಳಿ ಹಾಗೂ ಕೆ.ಎಸ್. ಈಶ್ವರಪ್ಪ
ಸತೀಶ ಜಾರಕಿಹೊಳಿ ಹಾಗೂ ಕೆ.ಎಸ್. ಈಶ್ವರಪ್ಪ   

ಗೋಕಾಕ (ಬೆಳಗಾವಿ ಜಿಲ್ಲೆ): ‘ಬಿಜೆಪಿ ಸರ್ಕಾರದಲ್ಲಿ ಹಲಾಲ್‌ಗೆ ಮೊದಲ ಬಲಿಯಾದ ಮೊದಲ ಮಂತ್ರಿ ಕೆ.ಎಸ್. ಈಶ್ವರಪ್ಪ’ ಎಂದು ವ್ಯಂಗ್ಯವಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ‘2ನೇ ಬಲಿ ಯಾರು ಎನ್ನುವುದನ್ನು ಕಾದು ನೋಡುತ್ತಿದ್ದೇವೆ’ ಎಂದು ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಮ್ಮ ಹೋರಾಟಕ್ಕೆ ಮಣಿದು ಬಿಜೆಪಿಯವರು ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆದಿದ್ದಾರೆ. ಇಲ್ಲದಿದ್ದರೆ ಹಿಂದೇಟು ಹಾಕುತ್ತಿದ್ದರು’ ಎಂದರು.

‘ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಸಾಲದು. ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು. ಈ ಹಿನ್ನೆಲೆಯಲ್ಲಿ ಪಕ್ಷದಿಂದ 8 ತಂಡಗಳನ್ನು ರಚಿಸಿ, ಎಲ್ಲ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಹೋರಾಟ ತೀವ್ರಗೊಳ್ಳಲಿದೆ’ ಎಂದು ಹೇಳಿದರು.

ADVERTISEMENT

‘ಕೋವಿಡ್ ಸಮಯದಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ. ಶೇ 40ರಷ್ಟು ಕಮಿಷನ್‌ ದಂಧೆ ನಡೆಯುತ್ತಿದೆ. ಎಲ್ಲ ಗುತ್ತಿಗೆದಾರರೂ ದೂರು ನೀಡಿದರೆ ಭ್ರಷ್ಟಾಚಾರ ಹೊರಬೀಳಲಿದೆ’ ಎಂದು ತಿಳಿಸಿದರು.

‘ಯಾವ ರಾಜ್ಯದಲ್ಲಿ ಏನು ನಡೆಯುತ್ತಿದೆ ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೊತ್ತಿದೆ. ಭ್ರಷ್ಟಾಚಾರಕ್ಕೆ ಅವರ ಬೆಂಬಲವಿದೆ. ಹೀಗಾಗಿ, ಮಿತಿ ಮೀರಿದ ಭ್ರಷ್ಟಾಚಾರಕ್ಕೆ ರಾಜ್ಯ ಸಾಕ್ಷಿಯಾಗುತ್ತಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.