ಬೆಳಗಾವಿ: ‘ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸ್ವಯಂ ರಕ್ಷಣೆಗಾಗಿ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅವರನ್ನು ಭೇಟಿ ಮಾಡಿದ್ದರು’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕಾಂಗ್ರೆಸ್ನ ಮಾಜಿ ಸಂಸದೆ, ಚಿತ್ರನಟಿ ರಮ್ಯಾ ಆಕ್ಷೇಪ ವ್ಯಕ್ತಪಡಿಸಿರುವುದು ಸರಿಯಲ್ಲ’ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಇಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ‘ಬಹಳ ದಿನಗಳಿಂದ ರಾಜಕಾರಣದಿಂದ ದೂರವಿದ್ದವರು ಏಕಾಏಕಿ ಬಂದು ಹೇಳಿಕೆ ಕೊಡಬೇಕೇಕೆ?’ ಎಂದು ಕೇಳಿದರು.
‘ಎಂ.ಬಿ. ಪಾಟೀಲ ಹಾಗೂ ಶಿವಕುಮಾರ್ ಇಬ್ಬರೂ ದೊಡ್ಡ ನಾಯಕರು. ವೈಯಕ್ತಿಕವಾಗಿ ನಾವು ಅನೇಕ ಬಾರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೇವೆ. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೂ ಭೇಟಿಯಾಗಿದ್ದೇವೆ. ವೈಯಕ್ತಿಕ ಸಂಬಂಧ ಬೇರೆ; ರಾಜಕಾರಣ ಬೇರೆ’ ಎಂದರು.
‘ಪಾಟೀಲರು ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿದ್ದರೆ ಅದರಲ್ಲಿ ತಪ್ಪೇನಿಲ್ಲ. ಅಲ್ಲದೇ, ಆ ನಾಯಕರಿಬ್ಬರೂ ಸ್ಪಷ್ಟನೆ ಕೊಟ್ಟಾಗಿದೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಸಮಂಜಸವಲ್ಲ. ರಮ್ಯಾ ಅವರು ರಾಜಕೀಯ ವಿಶ್ಲೇಷಣೆಯಿಂದ ದೂರ ಉಳಿಯಬೇಕು. ದಿಢೀರನೆ ಬಂದು ಹೇಳಿಕೆ ಕೊಡುವುದು ಸರಿಯಲ್ಲ’ ಎಂದು ಹೇಳಿದರು.
‘ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು, ವಾಮ ಮಾರ್ಗದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವುದನ್ನು ಖಂಡಿಸುತ್ತೇವೆ. ಹಗರಣಗಳಿಂದ ಅಭಿವೃದ್ಧಿ ಕುಂಠಿತವಾಗಿರುವುದನ್ನು, ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಗಳು ಮೊದಲಾದವುಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಅಡ್ಡದಾರಿ ಹಿಡಿದಿದೆ’ ಎಂದು ವಾಗ್ದಾಳಿ ನಡೆಸಿದರು.
‘ಕಾಯ್ದೆಯನ್ನು ವಿಧಾನಪರಿಷತ್ನಲ್ಲಿ ತೀವ್ರವಾಗಿ ವಿರೋಧಿಸುತ್ತೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.